ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಬೆಲೆ ಏರಿಕೆಯ ತನ್ನ ನಿರ್ಧಾರದಿಂದ ಹಿಂದಕ್ಕೆ ಸರಿಯುವವರೆಗೆ ರಾಜ್ಯದ ಉದ್ದಗಲಕ್ಕೆ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ (BS Yediyurappa) ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಆರಂಭವಾದ ಬಿಜೆಪಿಯ ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಂಡ ಬಳಿಕ, ಮಾಧ್ಯಮಗಳ ಜತೆ ಅವರು ಮಾತನಾಡಿದರು. ಸರ್ಕಾರವು ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿದೆ. ನೀರಾವರಿ ಕಾರ್ಯಗಳನ್ನು ಮಾಡುತ್ತಿಲ್ಲ. ಸರ್ಕಾರವು ಬೆಲೆ ಏರಿಕೆ ಮೂಲಕ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ ಅವರು, ಈ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಟೀಕಿಸಿದರು.
ಸಿದ್ದರಾಮಯ್ಯನವರ ಸರ್ಕಾರಕ್ಕೆ ಜನಹಿತ ಮುಖ್ಯವಲ್ಲ
ನಾವೆಲ್ಲರೂ ರಾಜ್ಯದ ಉದ್ದಗಲಕ್ಕೆ ಪ್ರವಾಸ ಮಾಡುತ್ತೇವೆ. ಈ ಸರ್ಕಾರವು ಜನಹಿತವನ್ನು ಮರೆತು ಒಂದು ರೀತಿ ತುಘಲಕ್ ದರ್ಬಾರ್ ಮಾಡುತ್ತಿದ್ದು, ಇದನ್ನು ನಾವು- ನೀವು ಸೇರಿ ಖಂಡಿಸಬೇಕಿದೆ. ಸಿದ್ದರಾಮಯ್ಯನವರ ಸರ್ಕಾರಕ್ಕೆ ಜನಹಿತವು ಮುಖ್ಯವಲ್ಲ ಎಂದು ಆರೋಪಿಸಿದರು.
ಈ ಸುದ್ದಿಯನ್ನೂ ಓದಿ | Basavaraj Bommai: ಕಾಂಗ್ರೆಸ್ನವರು ವಕ್ಫ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ತಿದ್ದುಪಡಿಗೆ ವಿರೋಧ: ಬೊಮ್ಮಾಯಿ ಆರೋಪ
ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದ ಉಸಿರುಕಟ್ಟುವ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಮನೆಮನೆಗೆ ತೆರಳಿ ಜನಜಾಗೃತಿ ಮೂಡಿಸಬೇಕು. ಈ ಸರ್ಕಾರಕ್ಕೆ ಪಾಠ ಕಲಿಸಬೇಕು. ಅಧಿಕಾರ ಬಿಟ್ಟು ತೊಲಗುವಂತೆ ಹೇಳಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.