ಕಲಬುರಗಿ, ಸೆ.17: ರಾಜ್ಯದಲ್ಲಿ ಉತ್ತಮ ಮಳೆ- ಬೆಳೆಯಾಗಿ, ಜನರು ಸುಖ, ಶಾಂತಿ ಹಾಗೂ ನೆಮ್ಮದಿಯಿಂದ ಬದುಕುವಂತಾಗಲಿ ಎಂದು ಗಾಣಗಾಪುರ ದತ್ತಾತ್ರೇಯನಲ್ಲಿ ಪ್ರಾರ್ಥಿಸಿದ್ದೇನೆ ಎಂದು ಸಿಎಂ ಡಿ.ಕೆ. ಶಿವಕುಮಾರ್ (CM DK Shivakumar) ತಿಳಿಸಿದರು. ಜಿಲ್ಲೆಯ ಗಾಣಗಾಪುರದ ಶ್ರೀ ದತ್ತಾತ್ರೇಯ ಸನ್ನಿಧಿಗೆ ಗುರುವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.
'ಗಾಣಗಾಪುರ ದಕ್ಷಿಣ ಭಾರತದ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠ ಪುಣ್ಯಕ್ಷೇತ್ರವಾಗಿದೆ. ಇಲ್ಲಿಗೆ ಆಗಮಿಸುವ ಭಕ್ತರ ಮನೋಕಾಮನೆಗಳು ಈಡೇರುತ್ತವೆ ಎಂಬ ದೃಢ ನಂಬಿಕೆಯಿದೆ. ನನ್ನ ಕಷ್ಟಕಾಲದಲ್ಲಿ ಹಾಗೂ ಅಭಿವೃದ್ಧಿಯ ಪಯಣದಲ್ಲಿ ಇಲ್ಲಿನ ಅರ್ಚಕರು ಮತ್ತು ಅಭಿಮಾನಿಗಳು ತಮಗಾಗಿ ಹಾಗೂ ರಾಜ್ಯದ ಶ್ರೇಯಸ್ಸಿಗೆ ನಿರಂತರ ಪ್ರಾರ್ಥನೆ ಸಲ್ಲಿಸಿದ್ದರು. ಇವತ್ತು ಬಹಳ ಪುಣ್ಯದಿನ. 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಭಗವಂತನ ಪ್ರಾರ್ಥನೆ ಮಾಡುವ ಭಾಗ್ಯ ನನಗೆ ದೊರೆತಿದೆ ಎಂದರು.
ಗಾಣಗಾಪುರ ಕ್ಷೇತ್ರಕ್ಕೆ ಮೂಲಸೌಕರ್ಯ ಅಭಿವೃದ್ಧಿ
ಗಾಣಗಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಈಗಾಗಲೇ ಸೂಕ್ತ ಯೋಜನೆಗಳನ್ನು ಘೋಷಿಸಿದೆ. ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮನವಿಯಂತೆ ಹಂತ- ಹಂತವಾಗಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದೆ. ಬಿಜೆಪಿ ಪಕ್ಷದ ನಾಯಕರು ಅಧಿವೇಶನದಲ್ಲಿ ಚರ್ಚೆ ಮಾಡದೆ, ಕೇವಲ ರಾಜಕೀಯ ಮಾಡಿದರು. ಬರಗಾಲ ಕುರಿತು ಚರ್ಚಿಸಲು ಈ ತಿಂಗಳ 21ರಿಂದ 3 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರಾದ ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಅರುಣಕುಮಾರ ಎಂ.ವೈ. ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.