ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Women Reservation Bill: ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಸದಾ ಬೆಂಬಲಿಸುತ್ತದೆ: ಸಿಎಂ ಸಿದ್ದರಾಮಯ್ಯ

CM Siddaramaiah: ಪ್ರಸ್ತುತ ಮಹಿಳಾ ಮೀಸಲಾತಿ ಬಿಲ್ ಅನ್ನು ಕಾಂಗ್ರೆಸ್ ವಿರೋಧಿಸಿತು ಎಂದು ಬಿಜೆಪಿ ಸುಳ್ಳುಪ್ರಚಾರ ಮಾಡುತ್ತಿದೆ. ಆದರೆ ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗುಂಡ್ಲುಪೇಟೆ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ.

ಗುಂಡ್ಲುಪೇಟೆ (ಚಾಮರಾಜನಗರ), ಏ.21: ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು ಸದಾ ಬೆಂಬಲಿಸುತ್ತದೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಚಾಮರಾಜನಗರದ ಜೆಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಅವರು, ಮಾತನಾಡಿದರು.

ಗುಂಡ್ಲುಪೇಟೆ ತಾಲೂಕಿಗೆ ವಿಶೇಷ ಆದ್ಯತೆ

ಇಂದು ಗುಂಡ್ಲುಪೇಟೆಯಲ್ಲಿ 475 ಕೋಟಿ ರೂ.ಗಳ ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯೂ ಸೇರಿದಂತೆ ಒಟ್ಟು 523 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಂಜುಂಡಪ್ಪ ವರದಿಯ ಪ್ರಕಾರ ಗುಂಡ್ಲುಪೇಟೆಯನ್ನು ಅತಿ ಹಿಂದುಳಿದ ತಾಲೂಕೆಂದು ಗುರುತಿಸಲಾಗಿದ್ದು, ಈ ತಾಲೂಕಿಗೆ ವಿಶೇಷ ಆದ್ಯತೆಯನ್ನು ನೀಡಲಾಗಿದೆ. ಈ ಕಾರ್ಯಗಳಿಗೆ ಸ್ಥಳೀಯ ಶಾಸಕ ಗಣೇಶ್ ಪ್ರಸಾದ್ ಅವರ ಒತ್ತಾಸೆಯಿಂದ ಇದು ಸಾಧ್ಯವಾಗಿದೆ. ತಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ನಿಷ್ಠೆಯಿಂದ ಶ್ರಮಿಸುತ್ತಿರುವುದಾಗಿ ತಿಳಿಸಿದರು.

CM Siddaramaiah

ವಿರೋಧ ಪಕ್ಷಗಳ ಅಪಪ್ರಚಾರ

ನಮ್ಮ ಸರ್ಕಾರದ ಮೂರು ವರ್ಷಗಳ ಅಧಿಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದೆ. ಆದಾಗ್ಯೂ ವಿರೋಧಪಕ್ಷಗಳು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದೆ. ಆದರೆ ಜನರು ಇದರ ಸತ್ಯಾಸತ್ಯತೆಯನ್ನು ಅರಿಯಬೇಕು ಎಂದರು.

ಮಹಿಳಾ ಮೀಸಲಾತಿ ಅತ್ಯಗತ್ಯ

ಪ್ರಸ್ತುತ, ಮಹಿಳಾ ಮೀಸಲಾತಿ ಬಿಲ್ ಅನ್ನು ಕಾಂಗ್ರೆಸ್ ವಿರೋಧಿಸಿತು ಎಂದು ಬಿಜೆಪಿ ಸುಳ್ಳುಪ್ರಚಾರ ಮಾಡುತ್ತಿದೆ. ಆದರೆ ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಹಿಂದೆ ಸಂವಿಧಾನದ ಕಲಂ 73,74 ತಿದ್ದುಪಡಿಯನ್ನು ಬಿಜೆಪಿಯವರು ವಿರೋಧಿಸಿದ್ದರು. ಪ್ರಧಾನಿ ಮೋದಿಯವರು ಮಹಿಳಾ ಮೀಸಲಾತಿಯನ್ನು ವಿರೋಧಿಸಿದವರನ್ನು ಮಹಿಳೆಯರು ಕ್ಷಮಿಸುವುದಿಲ್ಲ ಎಂದಿದ್ದಾರೆ. ಆದರೆ 2023ರಲ್ಲಿಯೇ ಮಹಿಳಾ ಮೀಸಲಾತಿ ಕಾಯ್ದೆ ತರಲಾಗಿದ್ದು, ಈ ಕಾಯ್ದೆಗೆ ಕಾಂಗ್ರೆಸ್ ವಿರೋಧಿಸದೇ ಸ್ವಾಗತಿಸಿದ್ದೆವು. ಆದರೆ ಸಹಮತಿ ಸೂಚಿಸಲಾಗಿದ್ದ ಮಹಿಳಾ ಮೀಸಲಾತಿಯನ್ನು 2028ರವರೆಗೆ ಜಾರಿಗೆ ತರಲು ಸಾಧ್ಯವಿಲ್ಲವೆಂದು ಬಿಜೆಪಿಯವರೇ ಹೇಳಿದರು. ಕಾಂಗ್ರೆಸ್ ಪಕ್ಷ ಎಂದಿಗೂ ಮಹಿಳಾ ಮೀಸಲಾತಿಯನ್ನು ಬೆಂಬಲಿಸುತ್ತದೆ. ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದು, ಅವರಿಗೆ ನ್ಯಾಯಯುತವಾದ ಮೀಸಲಾತಿ ದೊರೆಯಬೇಕಿರುವುದು ಅತ್ಯಗತ್ಯ ಎಂದರು.

ಡಿಲಿಮಿಟೇಷನ್ ಕಾಯ್ದೆಗೆ ಕಾಂಗ್ರೆಸ್‌ನ ವಿರೋಧವಿದೆ

ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿಗಳು, ನಗರಸಭೆ, ನಗರಪಾಲಿಕೆಗಳಲ್ಲಿ ಶೇ.50 ರಷ್ಟು ಮಹಿಳೆಯರಿದ್ದು, ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ. ಪ್ರಸ್ತುತ, ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಕಾಯ್ದೆಯ ಜತೆಗೆ ಡೀಲಿಮಿಟೇಷನ್ ಕಾಯ್ದೆ ತರಲು ಪ್ರಯತ್ನಿಸಿದ್ದರಿಂದ ವಿರೋಧವನ್ನು ವ್ಯಕ್ತಪಡಿಸಲಾಗಿದೆ. ಕಾಂಗ್ರೆಸ್ ಡಿಲಿಮಿಟೇಷನ್ ಕಾಯ್ದೆಯನ್ನು ವಿರೋಧಿಸಿದೆಯೇ ಹೊರತು ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಯನ್ನು ಸಾಧಿಸಲಾಗುತ್ತಿದೆ

ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಹಲವು ರಾಜ್ಯಗಳಲ್ಲಿ ಅನುಸರಿಸುತ್ತಿದ್ದಾರೆ. ಗ್ಯಾರಂಟಿಗಳನ್ನು ಜಾರಿಗೊಳಿಸಿದರೆ, ಕರ್ನಾಟಕ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಟೀಕಿಸಿದ್ದರು. ಆದರೂ, ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಯನ್ನು ಸಾಧಿಸುತ್ತಿರುವುದಕ್ಕೆ, ಇಂದು ಗುಂಡ್ಲುಪೇಟೆಯಲ್ಲಿ ನಡೆದಿರುವ ಈ ಕಾರ್ಯಕ್ರಮವೇ ಸಾಕ್ಷಿ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ ಎಂದರು.

ಎಸ್‌ಸಿಎಸ್‌ಪಿ, ಟಿಎಸ್‌ಪಿ ಅಡಿ ಮೂರು ವರ್ಷಗಳಲ್ಲಿ 1 ಲಕ್ಷ 60 ಸಾವಿರ ಕೋಟಿ ವೆಚ್ಚ

ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಒಟ್ಟು 1 ಲಕ್ಷ 60 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಎಸ್.ಸಿ.ಎಸ್. ಪಿ / ಟಿ ಎಸ್ ಪಿ ಯೋಜನೆಯಡಿ 1 ಲಕ್ಷ 10 ಸಾವಿರ ಕೋಟಿ ಮಾತ್ರ ವೆಚ್ಚ ಮಾಡಿದೆ ಎಂದರು.

ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆ

ಸಮಾಜದಲ್ಲಿ ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಹಿಂದುಳಿದವರು ಹಾಗೂ ಎಲ್ಲಾ ಧರ್ಮ, ಜಾತಿಗಳ ಬಡವರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಎಂದಿಗೂ ಬಡವರ, ಅಲ್ಪಸಂಖ್ಯಾತರ, ದಲಿತರ ಪಕ್ಷ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ ಎಂದರು. ಬಿಜೆಪಿ ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಅವರು ಎಂದಿಗೂ ಬಡವರ ಪರವಾಗಿಲ್ಲ ಹಾಗೂ ಸಂವಿಧಾನ ವಿರೋಧಿಗಳು ಎಂದು ಆರೋಪಿಸಿದರು.

ಎಲ್ಲಾ ಇಲಾಖೆಗಳ ಮೂಲಕ ಅಭಿವೃದ್ಧಿ

ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಇಂಧನ, ಕೃಷಿ ಸೇರಿದಂತೆ ಎಲ್ಲಾ ಇಲಾಖೆಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು.

ಗುಂಡ್ಲುಪೇಟೆಯಲ್ಲಿ ಸಂಚಾರ ಪೊಲೀಸ್ ಠಾಣೆ ಸ್ಥಾಪನೆ

ಶಾಸಕ ಗಣೇಶ್ ಪ್ರಸಾದ್ ಅವರಿಗೆ ಕೆಲಸ ಮಾಡುವ ಉತ್ಸಾಹವಿದ್ದು, ಅದಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದರು. ಗುಂಡ್ಲುಪೇಟೆಯಲ್ಲಿ ಸಂಚಾರ ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಈ ಬಾರಿ ಆಯವ್ಯಯದಲ್ಲಿ ಘೋಷಣೆ ಮಾಡಲಾಗಿದೆ. ಕನಕ ಭವನಕ್ಕೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಇಡಿ ದಾಳಿ: ಕೇಂದ್ರ ಸರ್ಕಾರ ಕಾಂಗ್ರೆಸ್‌ನವರನ್ನು ಟಾರ್ಗೆಟ್‌ ಮಾಡಿದೆ ಎಂದ ಸಿಎಂ

ತೆರಕಣಾಂಬಿ ಪಿಎಚ್‌ಸಿ 30 ಹಾಸಿಗೆಗಳುಳ್ಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿದೆ

ತೆರಕಣಾಂಬಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕೇಂದ್ರವನ್ನು ಮೇಲ್ದರ್ಜೆಗೇರಿಸಿ 30 ಹಾಸಿಗೆಗಳ ಆಸ್ಪತ್ರೆಯನ್ನಾಗಿಸಲಾಗಿದೆ. ಇಡೀ ಕ್ಷೇತ್ರದ ಅಭಿವೃದ್ಧಿಯನ್ನು ಶಾಸಕರು ಮಾಡಲಿದ್ದಾರೆ. ಇದೇ ವೇಳೆ ಮೂರು ವರ್ಷಗಳಲ್ಲಿ ಸರ್ಕಾರ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಹೊರತರಲಾಗಿದೆ ಎಂದರು. ಕೆರೆಗಳನ್ನು ತುಂಬಿಸುವ ಕೆಲಸ ನಾಳೆಯಿಂದಲೇ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.