ಮತದಾರ ಪಟ್ಟಿಯಲ್ಲಿ ಅಕ್ರಮ ಎಸಗಿರುವ ಬಿಎಒಗಳ ಅಮಾನತುಗೊಳಿಸಿ: ಚುನಾವಣಾ ಆಯೋಗಕ್ಕೆ ಡಿಕೆಶಿ ಮನವಿ ಪತ್ರ
DK Shivakumar: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಮಂಗಳವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿತು. -
ಬೆಂಗಳೂರು, ಫೆ.17: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಲೋಪ ಸರಿಪಡಿಸುವಂತೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗವು ಮಂಗಳವಾರ ರಾಜ್ಯ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಬಳ್ಳಾರಿ ರಸ್ತೆಯಲ್ಲಿರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಆಯುಕ್ತ ಜಿ.ಎಸ್. ಸಂಗ್ರೇಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ನಿಯೋಗದಲ್ಲಿ ಸಚಿವರಾದ ರಾಮಲಿಂಗಾ ರೆಡ್ಡಿ, ದಿನೇಶ್ ಗುಂಡೂರಾವ್, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್, ಶಾಸಕರಾದ ರಿಜ್ವಾನ್ ಅರ್ಷದ್, ಎ.ಸಿ. ಶ್ರೀನಿವಾಸ್, ಎಂಎಲ್ಸಿಗಳಾದ ಪುಟ್ಟಣ್ಣ, ಶ್ರೀನಿವಾಸ್ ಇದ್ದರು.
ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ʼಇಂದು ನಮ್ಮ ಪಕ್ಷದ ನಾಯಕರ ನಿಯೋಗದೊಂದಿಗೆ ರಾಜ್ಯದ ಚುನಾವಣಾ ಆಯೋಗದ ಆಯುಕ್ತರನ್ನು ಭೇಟಿ ಮಾಡಿದ್ದೇವೆ. ರಾಜ್ಯ ಚುನಾವಣಾ ಆಯೋಗವು ಮುಂಬರುವ ಜಿಬಿಎ ಪಾಲಿಕೆಗಳ ಚುನಾವಣೆ, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲಿದೆ. ಆಯೋಗವು ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡುತ್ತಿತ್ತು, ಈ ಹಿಂದೆ ನೀಡಲಾಗಿದ್ದ ಮತದಾರರ ಪಟ್ಟಿ ಆಧಾರವಾಗಿಟ್ಟುಕೊಂಡು ಈ ಪರಿಷ್ಕರಣೆ ಮಾಡುತ್ತಿದೆ. ಈಗ ಬಿಡುಗಡೆಯಾಗಿರುವ ಮತದಾರರ ಕರಡು ಪಟ್ಟಿಯಲ್ಲೂ ಕೆಲವು ಲೋಪಗಳಿವೆʼ ಎಂದು ತಿಳಿಸಿದರು.
ಮಹದೇವಪ್ಪ ದೊಡ್ಡವರು, ಈಗ ಅವರೂ ನಮ್ಮ ಹೈಕಮಾಂಡ್ನ ಭಾಗ: ಡಿಸಿಎಂ ಡಿ.ಕೆ. ಶಿವಕುಮಾರ್
ಬಿಎಲ್ಒಗಳ ಜತೆಯಲ್ಲಿ ರಾಜಕೀಯ ಪಕ್ಷಗಳ ಬಿಎಲ್ಎಗಳನ್ನು ಕಳುಹಿಸಿ ಮ್ಯಾಪಿಂಗ್ ಮಾಡಿ
ಬಿಎಲ್ಒಗಳು ಮತಪಟ್ಟಿಯಲ್ಲಿ ಅಕ್ರಮ ಎಸಗುತ್ತಿದ್ದಾರೆ. ಕಳೆದ ಬಾರಿ ಒಂದು ಕುಟುಂಬದ ಮತಗಳನ್ನು ಬೇರೆ ಬೇರೆ ಬೂತ್ಗಳಿಗೆ ಸೇರಿಸಲಾಗಿತ್ತು. ಇಲ್ಲಿ ಮ್ಯಾಪಿಂಗ್ ಸರಿಯಾದ ರೀತಿಯಲ್ಲಿ ಆಗುತ್ತಿಲ್ಲ. ಹೀಗಾಗಿ ಬಿಎಲ್ಒಗಳ ಜತೆಗೆ ರಾಜಕೀಯ ಪಕ್ಷಗಳ ಬಿಎಲ್ಎಗಳನ್ನು ಕರೆದುಕೊಂಡು ಹೋಗಿ ಪರಿಷ್ಕರಣೆ ಮಾಡಬೇಕು. ಇಲ್ಲಿ ಮತದಾರರ ಪಟ್ಟಿ ಜತೆಗೆ, ಮನೆಗಳು ಹಾಗೂ ಮತಗಳ ಮ್ಯಾಪಿಂಗ್ ಆಗಬೇಕು. ಈ ಹಿನ್ನೆಲೆಯಲ್ಲಿ ಕಳೆದ ಚುನಾವಣೆಯಲ್ಲಿ ಕೆಲವು ಕ್ಷೇತ್ರಗಳು ಹಾಗೂ ಬೂತ್ಗಳಲ್ಲಿ ಆಗಿದ್ದ ಲೋಪಗಳನ್ನು ಸರಿಪಡಿಸಬೇಕು. ನ್ಯಾಯಬದ್ಧವಾಗಿ ಕಾನೂನು ಚೌಕಟ್ಟಿನಲ್ಲಿ ಪರಿಷ್ಕರಣೆ ಮಾಡಬೇಕು. ಈ ಹಿಂದೆ ಮತದಾರರ ಬದಲಿಗೆ ಬೇರೆಯವರು ಫಾರಂ ಡಿಲೀಟ್ ಮಾಡಿಸಲಾಗಿದೆ. ಇದೆಲ್ಲವನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದ್ದೇವೆ ಎಂದರು.
ಮುಂದಿನ ದಿನಗಳಲ್ಲಿ ಜಿಬಿಎ ಸೇರಿದಂತೆ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳನ್ನು ನಡೆಸಲಾಗುತ್ತದೆ. ಈಗಲೇ ಮತದಾರರ ಪಟ್ಟಿಯನ್ನು ಈಗಲೇ ಪರಿಷ್ಕರಿಸಬೇಕು. ನಾಳೆ ಹೆಚ್ಚು ಕಮ್ಮಿಯಾದರೆ ನಿಮಗೇ ಕೆಟ್ಟ ಹೆಸರು, ಸರ್ಕಾರಕ್ಕೂ ಕೆಟ್ಟ ಹೆಸರು ಎಂದು ಮುನ್ನೆಚ್ಚರಿಕೆಯಾಗಿ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ. ಈವರೆಗೂ ಮತದಾರರ ಪಟ್ಟಿಯಲ್ಲಿ ನಾವು ಕಂಡಿರುವ ಲೋಪದೋಷಗಳನ್ನು ಅವರಿಗೆ ಮಾಹಿತಿ ನೀಡಿದ್ದೇವೆ. ಮತಗಳನ್ನು ಬೇರೆ ಬೂತ್ಗಳಿಗೆ ವಿಂಗಡಿಸುವುದು, ಅಲ್ಪಸಂಖ್ಯಾತರು, ಪರಿಶಿಷ್ಟರ ಮತಗಳನ್ನು ಅಕ್ರಮವಾಗಿ ತೆಗೆದಿರುವವರು, ನಕಲಿ ಮತಗಳನ್ನು ಸೇರಿಸಿರುವ ಬಿಎಲ್ಒಗಳನ್ನು ಅಮಾನತುಗೊಳಿಸಬೇಕು. ಕಾನೂನು ಚೌಕಟ್ಟಿನಲ್ಲಿ ಮತದಾರರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದರು.
ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಿದೆಯೇ ಎಂದು ಕೇಳಿದಾಗ, ʼರಾಜ್ಯ ಚುನಾವಣಾ ಆಯೋಗಕ್ಕೆ ಪ್ರತ್ಯೇಕವಾಗಿ ಪರಿಷ್ಕರಣೆ ಮಾಡುವ ಅವಕಾಶ ಇದೆ. ಆ ಕೆಲಸವನ್ನು ಅವರು ಮಾಡುತ್ತಿದ್ದಾರೆʼ ಎಂದು ಹೇಳಿದರು.
DK Shivakumar: ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರಲಿವೆ: ಡಿ.ಕೆ. ಶಿವಕುಮಾರ್ ವಿಶ್ವಾಸ
ಹೊಸದಾಗಿ ಮ್ಯಾಪಿಂಗ್ ಮಾಡಿ ಮತದಾರರ ಪಟ್ಟಿ ಸಿದ್ಧಪಡಿಸಿ
ಎರಡು ಪರಿಷ್ಕರಣೆ ಗೊಂದಲವಾಗುವುದಿಲ್ಲವೇ ಎಂದು ಕೇಳಿದಾಗ, ʼಅದರ ಬಗ್ಗೆ ನಾವು ಚರ್ಚೆ ಮಾಡುವುದಿಲ್ಲ. ನಾವು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸುವ ಜವಾಬ್ದಾರಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ನೀಡಿದ್ದು, ಅವರು ತಮ್ಮ ಕೆಲಸ ಮಾಡುತ್ತಿದ್ದಾರೆ. ಹಿಂದೆ ಇದ್ದ ಮತದಾರರ ಪಟ್ಟಿ ಸರಿಯಿಲ್ಲ. ಮತ್ತೊಮ್ಮೆ ಮ್ಯಾಪಿಂಗ್ ಮಾಡಿ ಮತದಾರರ ಪಟ್ಟಿ ಸಿದ್ಧಪಡಿಸಲಿ, ಯಾರಿಗೆ ಮತದಾನ ಮಾಡುವ ಅರ್ಹತೆ ಇದೆಯೋ ಅವರಿಗೆ ಮತದಾನದ ಹಕ್ಕು ನೀಡಲಿʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.