HD Kumaraswamy: ಮೈಶುಗರ್ ಶಾಲೆ ಶಿಕ್ಷಕರಿಗೆ ನೆರವಾದ ಎಚ್.ಡಿ. ಕುಮಾರಸ್ವಾಮಿ; 19,94,200 ರೂ. ಚೆಕ್ ಹಸ್ತಾಂತರ
Mandya Mysugar School: ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಶನಿವಾರ 19,94,200 ಮೊತ್ತದ ಚೆಕ್ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದ್ದಾರೆ.
ಮೈಶುಗರ್ ಶಾಲೆ ಶಿಕ್ಷಕರಿಗೆ ಎಚ್.ಡಿ. ಕುಮಾರಸ್ವಾಮಿ ಆರ್ಥಿಕ ನೆರವು. -
ಮಂಡ್ಯ, ಡಿ.6: ಸುಮಾರು ಹದಿನೈದು ತಿಂಗಳಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ (Mandya Mysugar School) ಶಿಕ್ಷಕರ ಬಾಕಿ ವೇತನಕ್ಕಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy), ತಮ್ಮ ಸಂಸದರ ವೇತನವನ್ನೇ ನೀಡಿದ್ದಾರೆ. ಈ ಮೊದಲು ನೀಡಿದ್ದ ಭರವಸೆಯಂತೆ ಶನಿವಾರ ಬೆಳಗ್ಗೆ ಶಾಲೆಗೆ ಭೇಟಿ ನೀಡಿದ ಸಚಿವರು, ಶನಿವಾರ 19,94,200 ಮೊತ್ತದ ಚೆಕ್ ಅನ್ನು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಶಿಕ್ಷಕರು ಸಚಿವರಿಗೆ ಧನ್ಯವಾದ ಹೇಳಿದರು.
ಈ ವೇಳೆ ಮಾತನಾಡಿದ ಸಚಿವರು, ವೇತನವಿಲ್ಲದೆ ಕೆಲಸ ಮಾಡುವುದು ಕಷ್ಟ. ನಿಮ್ಮ ನೋವು ನನಗೆ ಅರ್ಥವಾಗಿದೆ. ಹೀಗಾಗಿ ನಿಮ್ಮ ಕಷ್ಟಕ್ಕೆ ಸ್ಪಂದಿಸುತ್ತೇನೆ ಎಂದು ಮಾತು ಕೊಟ್ಟಿದ್ದೆ. ನಿಮಗೆ ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದು ತಿಳಿಸಿದರು.
ಇದು ಐತಿಹಾಸಿಕ ಶಾಲೆ. ಮಂಡ್ಯದ ಇತಿಹಾಸದಲ್ಲಿ ಈ ಶಾಲೆಗೂ ಒಂದು ಸ್ಥಾನವಿದೆ. ಹೀಗಾಗಿ ಶಾಲೆ ಸಂಕಷ್ಟಕ್ಕೆ ಸಿಲುಕುವುದು ನನಗೆ ಇಷ್ಟವಿಲ್ಲ. ಈ ಶಾಲೆಯನ್ನು ಉಳಿಸುವ ಬಗ್ಗೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡುತ್ತೇನೆ. ಪಿಯುಸಿವರೆಗೆ ಈ ಶಾಲೆಯಲ್ಲಿ ಶಿಕ್ಷಣ ದೊರೆಯಲಿ. ನಾನು ಕೂಡ ಶಾಲೆಯ ಉಳಿವಿಗೆ ಕೈ ಜೋಡಿಸುತ್ತೇನೆ. ಆದಿಚುಂಚನಗಿರಿ ಶ್ರೀಗಳೊಂದಿಗೂ ಈ ಬಗ್ಗೆ ಮಾತಾಡಿದ್ದೇನೆ. ಒಂದೇ ರಾತ್ರಿಯಲ್ಲಿ ಅಭಿವೃದ್ಧಿ ಮಾಡುತ್ತೇನೆ ಎಂದು ನಾನು ಹೇಳಲ್ಲ. ಹಂತ ಹಂತವಾಗಿ ಶಾಲೆಯ ಅಭಿವೃದ್ಧಿ ಮಾಡೋಣ. ಈ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಿ ಎಂದು ಕೇಳುತ್ತೇನೆ. ಮಂಡ್ಯದಲ್ಲಿ ಮೈಶುಗರ್ ಶಾಲೆಯೇ ನಂಬರ್ ಓನ್ ಶಾಲೆ ಆಗಿರಬೇಕು ಎಂಬುದು ನನ್ನ ಆಶಯವಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.
ರಷ್ಯಾ ಅಧ್ಯಕ್ಷ ಪುಟಿನ್ಗೆ ಪ್ರಧಾನಿ ಮೋದಿ ನೀಡಿದ ಉಡುಗೊರೆಗಳಿವು
ಶಿಕ್ಷಕರ ಕಷ್ಟ ತಿಳಿದು ನಾನು ಬಹಳ ನೊಂದಿದ್ದೆ. 15 ತಿಂಗಳಿಂದ ಸಂಬಳ ಇಲ್ಲದೇ ಕೆಲಸ ಮಾಡುವುದು ಎಂದರೆ ಸುಲಭವಲ್ಲ. ಆ ಸಂಕಷ್ಟದ ಕಾಲದಲ್ಲಿಯೂ ಅವರು ಮಕ್ಕಳಿಗೆ ವಿದ್ಯೆ ಕಲಿಸಿದ್ದಾರೆ. ಹೀಗಾಗಿ ಎಲ್ಲಾ ಶಿಕ್ಷಕರಿಗೆ ಅಭಿನಂದನೆ ಹೇಳುತ್ತೇನೆ ಎಂದು ಸಚಿವರು ಹೇಳಿದರು.
ಶಾಲೆ ಅಭಿವೃದ್ಧಿ ಎಲ್ಲರ ಕರ್ತವ್ಯ. ನನ್ನ ಕೈಲಾದದ್ದನ್ನು ನಾನು ಮಾಡುತ್ತೇನೆ. ಮಕ್ಕಳ ಅನುಕೂಲಕ್ಕೆ ಎರಡು ಶಾಲಾ ಬಸ್ ಬೇಕು ಎಂದು ಮನವಿ ಮಾಡಿದ್ದಾರೆ. ಮೈಶುಗರ್ ಶಾಲೆಯಲ್ಲಿ ಎಲ್ಕೆಜಿಯಿಂದ ಪಿಯುವರೆಗೆ ಉಚಿತ ಶಿಕ್ಷಣ ನೀಡಲು ಹೇಳಿದ್ದೇನೆ. ಈ ಬಗ್ಗೆ ಆದಿಚುಂಚನಗಿರಿ ಶ್ರೀಗಳ ಬಳಿ ಮನವಿ ಮಾಡಿದ್ದೇನೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಂಸತ್ ಕಲಾಪ ಮುಗಿದ ಬಳಿಕ ಶ್ರೀಗಳ ಮಾರ್ಗದರ್ಶನದಲ್ಲಿ ಚರ್ಚೆ ಮಾಡುತ್ತೇವೆ. ಕಾಂಗ್ರೆಸ್ ನಾಯಕರಿಗೂ ಈ ಬಗ್ಗೆ ಹೇಳುತ್ತೇನೆ. ಶಾಲೆ ವಿಷಯದಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಮೈಶುಗರ್ ಶಾಲೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದರು.
ಎಂಎಸ್ಪಿ ಬೆಲೆ ನಿಗದಿ ವಿಚಾರದಲ್ಲಿ ಉಂಟಾಗಿರುವ ಸಮಸ್ಯೆಯನ್ನು ರಾಜ್ಯ ಸರ್ಕಾರ ಬಗೆಹರಿಸಿಕೊಳ್ಳಲಿ. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ. ಆ ಬಳಿಕ ಕೇಂದ್ರವನ್ನು ಕೇಳಿ. ಎಂಎಸ್ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯದ ಕರ್ತವ್ಯ. ಇವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್ಗೆ ಹೋಗಬೇಕು ಅಂತಾರೆ. ನಾನು ಸಿಎಂ ಆಗಿದ್ದಾಗ ಕೋರ್ಟ್ಗೆ ಹೋಗಲಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ 4.5 ಸಾವಿರ ಕೋಟಿ ಸಾಲವನ್ನು ನಾನು ತೀರಿಸಿದ್ದೇನೆ. ನನ್ನ ಕಾಲದ ಸಾಲವನ್ನು ಇವರೇನು ತೀರಿಸಿಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.
ವಾಚ್ ಹೇಗೆ ಖರೀದಿ ಮಾಡಿದ್ದಾರೆ ಎನ್ನೋದೇ ಮುಖ್ಯ
ಸಿಎಂ, ಡಿಸಿಎಂ ಅವರಿಬ್ಬರೂ ಎಷ್ಟು ಲಕ್ಷ ಬೆಲೆ ವಾಚ್ ಕಟ್ಟಿದ್ದಾರೆ ಎನ್ನೋದು ಮುಖ್ಯವಲ್ಲ. ವಾಚ್ ಅನ್ನು ಹೇಗೆ ಖರೀದಿ ಮಾಡಿದ್ದಾರೆ ಎನ್ನೋದೇ ಮುಖ್ಯ. ಅವರ ದುಡಿಮೆ ದುಡ್ಡಿನಲ್ಲಿ ಖರೀದಿ ಮಾಡಿದ್ದಾರಾ ಹೇಗೆ ಎನ್ನೋದು ಮುಖ್ಯ ಎಂದು ಹೇಳಿದರು.
ವೈಟ್ಫೀಲ್ಡ್ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಸಚಿವ ಕೆ.ಜೆ. ಜಾರ್ಜ್
ಉಪ ಲೋಕಾಯುಕ್ತರು ಹೇಳಿಕೆಗೆ ಸೀಮಿತವಾಗಿದ್ದಾರೆ
ಉಪ ಲೋಕಾಯುಕ್ತರಿಗೆ ಒಂದ್ ನಮಸ್ಕಾರ. ಉಪ ಲೋಕಾಯುಕ್ತರಾಗಿ ಅವರು ಏನ್ ಕೆಲಸ ಮಾಡ್ತಿದ್ದಾರೆ? ಅವರ ಜವಬ್ದಾರಿ ಏನು? ಮಾಧ್ಯಮ ಮುಂದೆ ಹೇಳಿಕೆ ನೀಡಲಷ್ಟೇ ಅವರಿಗೆ ಅಧಿಕಾರ ನೀಡಲಾಗಿದೆಯಾ? ಇಲ್ಲಾ ದಾಖಲೆಗಳನ್ನ ಸಂಗ್ರಹಿಸಿ ಕ್ರಮ ತೆಗೆದುಕೊಳ್ಳಲಿಕ್ಕೆ ಅಧಿಕಾರ ನೀಡಲಾಗಿದೆಯಾ? ಯಾರ ಕಾಲದಲ್ಲಿ ಭ್ರಷ್ಟಾಚಾರ ನಡೆಯುತ್ತಿತ್ತು ಅನ್ನೋದು ಬೇರೆ ಚರ್ಚೆ. ಭ್ರಷ್ಟಾಚಾರ ಗೊತ್ತಿದ್ದೂ ಉಪ ಲೋಕಾಯುಕ್ತರು ಹೇಳಿಕೆಗೆ ಸೀಮಿತವಾಗಿದ್ದಾರೆ. ಹೀಗಾದರೆ ಪ್ರಯೋಜನವೇನು? ಎಂದು ದೂರಿದರು.