ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HD Kumaraswamy: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ: ಎಚ್‌ಡಿಕೆ

HD Kumaraswamy: ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿಗಣತಿ ಮಾಡುತ್ತಿದೆ: ಎಚ್‌ಡಿಕೆ

-

Profile Siddalinga Swamy Sep 20, 2025 7:01 PM

ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಆತುರಾತುರವಾಗಿ ಜಾತಿ ಗಣತಿ ಮಾಡುತ್ತಿದ್ದು, ಭವಿಷ್ಯದಲ್ಲಿ ಇದು ದೊಡ್ಡ ಸಮಸ್ಯೆಗೆ ಕಾರಣವಾಗಲಿದೆ. ಇದರ ಪ್ರತಿಫಲವನ್ನು ಕಾಂಗ್ರೆಸ್ ಪಕ್ಷ ಅನುಭವಿಸಲಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸಮೀಕ್ಷೆ ಕುರಿತ ಒಕ್ಕಲಿಗ ಸಮುದಾಯದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಭೆಯಲ್ಲಿ ಎಲ್ಲಾ ಸಾಧಕ -ಬಾಧಕಗಳ ಬಗ್ಗೆ ಚರ್ಚೆ ಮಾಡೆಲಾಗಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಎಲ್ಲಾ ಸಮಸ್ಯೆ ಬಗೆಹರಿಸುವ ಬಗ್ಗೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ಈಗಾಗಲೇ ಕಾಂತರಾಜ್ ಆಯೋಗ, ಜಯಪ್ರಕಾಶ್ ಹೆಗಡೆ ಆಯೋಗ ಆಯಿತು. ಈಗ ಮೂರನೇ ಆಯೋಗ ರಚನೆ ಆಗಿದೆ. ಈ ರೀತಿಯ ಆಯೋಗ ರಚನೆ ಮಾಡಬೇಕಾದರೆ ಏನೆಲ್ಲಾ ಮಾನದಂಡಗಳನ್ನು ಅನುಸರಿಸಿದ್ದಾರೆ ಎನ್ನುವುದನ್ನು ನೋಡಬೇಕು. ಸುಮ್ಮ ಸುಮ್ಮನೆ ಆಯೋಗ ರಚನೆ ಮಾಡಲು ಸಾಧ್ಯವಿಲ್ಲ. ಸಮೀಕ್ಷೆಗೆ 15 ದಿನಗಳ ಅವಕಾಶ ಕೊಟ್ಟಿದ್ದಾರೆ. ಅದರಲ್ಲಿ 9 ದಿನ ನವರಾತ್ರಿ ಬರುತ್ತದೆ, ಉಳಿದ 6 ದಿನಗಳಲ್ಲಿ ಆಯೋಗ ಏನು ವರದಿ ಕೊಡಲು ಸಾಧ್ಯ? ಹಾಗಾದರೆ ಇವರು ಕಾಂತರಾಜ್ ವರದಿಯನ್ನೇ ಭಟ್ಟಿ ಇಳಿಸುತ್ತಾರಾ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಸಮುದಾಯದ ಸ್ವಾಮೀಜಿಗಳ ನೇತೃತ್ವದಲ್ಲಿ ಸಭೆ ಮಾಡಿದ್ದೇವೆ. ಸರ್ಕಾರದಿಂದ ಸಮೀಕ್ಷೆಯಲ್ಲಿ ಅನ್ಯಾಯವಾದರೆ ಸ್ವಾಮೀಜಿಗಳ ನೇತೃತ್ವದಲ್ಲಿ ಮುಂದಿನ ಹೋರಾಟದ ರೂಪುರೇಷದ ಬಗ್ಗೆ ಚರ್ಚೆ ಮಾಡಿದ್ದೇವೆ. ಇದು ಸಣ್ಣ ಮಟ್ಟದ ಸಭೆ ಅಷ್ಟೇ. ಈ ಸರ್ಕಾರ ಬೆಂಕಿ ಹಚ್ಚಲು ಏನ್ ಬೇಕೋ ಅದನ್ನು ಮಾಡಿದೆ. ಇದರ ಪ್ರತಿಫಲ ಮುಂದೆ ಗೊತ್ತಾಗುತ್ತದೆ. ವಾಸ್ತವಾಂಶದ ಬಗ್ಗೆ ಮಾತ್ರ ಚರ್ಚೆ ಆಗಬೇಕು ಎಂದು ಅವರು ಕಿಡಿಕಾರಿದರು.

ಜಾತಿ ವಿಚಾರದಲ್ಲಿ ಒಕ್ಕಲಿಗರಿಗೆ ದೊಡ್ಡಮಟ್ಟದ ಪೆಟ್ಟು ಬಿದ್ದಿದೆ. ಬೆಂಗಳೂರಿನಲ್ಲಿ ಹೆಚ್ಚು ಭೂಮಿಯನ್ನು ಕಳೆದುಕೊಂಡಿದ್ದು ಒಕ್ಕಲಿಗರ ಸಮಾಜ. ಡಿ.ಕೆ. ಶಿವಕುಮಾರ್ ಎಲ್ಲಾ ಸಮಸ್ಯೆ ಬಗೆಹರಿಸಲು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಮುಂದೆ ನೋಡೋಣ, ಏನಾಗುತ್ತದೆ ಅಂತ. ಇದು ಇನ್ನೊಂದು ಕಾಂತರಾಜ್ ವರದಿ ಅಲ್ಲ, ಅದಕ್ಕಿಂತಲೂ ಕೆಟ್ಟದಾಗಿ ಇರುತ್ತದೆ ಎಂದು ಅವರು ದೂರಿದರು.

ಕ್ರಿಶ್ಚಿಯನ್ ಒಕ್ಕಲಿಗ ಜಾತಿಯನ್ನು ಹೇಗೆ ತೆಗೆಯುತ್ತಾರೆ ಎಂಬ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು, ಸಮಯದ ಅಭಾವ ಇದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರು,ಈಗ ಏನಿದೆ ಅದನ್ನೇ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೊಬ್ಬ ಮಂತ್ರಿ ಹೇಳಿದ್ದಾರೆ, ಈಗಿನ ಆಯೋಗ ಉತ್ತಮವಾದ ಆಯೋಗವಂತೆ. ಒಳ್ಳೆಯ ನಿರೀಕ್ಷೆ ಇಟ್ಟುಕೊಳ್ಳಬಹುದು ಎಂದು ಅವರು ಹೇಳಿದ್ದಾರೆ. ನಾನು ಆ ಮಂತ್ರಿಯನ್ನು ಕೇಳಲು ಬಯಸುತ್ತೇನೆ, ಇದು ಸತ್ಯದ ಆಯೋಗವೇ? ರಾಜ್ಯ ನೆಮ್ಮದಿಯಾಗಿ ಇದೆ. ಈ ಆಯೋಗ ಬೆಂಕಿ ಹಚ್ಚುವ ಕೆಲಸ ಮಾಡಲು ಹೊರಟಿದೆ. ಸಿದ್ದರಾಮಯ್ಯನವರು ಮುಂಜಾಗ್ರತೆ ಕ್ರಮವಾಗಿ ಯಾವುದೇ ಆಲೋಚನೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಯ ಮುಂದೂಡುವುದು ಮುಖ್ಯವಲ್ಲ. ವಾಸ್ತವಾಂಶದ ಪರಿಹಾರವಾಗಿ ತೀರ್ಮಾನ ತೆಗೆದುಕೊಳ್ಳಬೇಕು. ಬೆಂಗಳೂರು ನಗರದ ಅಭಿವೃದ್ಧಿ ಬಗ್ಗೆ ಪದೇ ಪದೇ ಚರ್ಚೆ ಮಾಡುತ್ತೇವೆ. ಬೆಂಗಳೂರು ನಗರದ ಅಭಿವೃದ್ಧಿಗಾಗಿ ಕಳೆದ 30 ವರ್ಷಗಳಲ್ಲಿ ಬೆಂಗಳೂರು ಅಭಿವೃದ್ಧಿಗಾಗಿ ಎಷ್ಟು ರೈತರ ಭೂಮಿ ಬಳಕೆ ಆಗಿದೆ, ಅದರಲ್ಲಿ ಬಹುಪಾಲು ಭೂಮಿ ಕಳೆದುಕೊಂಡವರು ಒಕ್ಕಲಿಗರು. ಈಗಲೂ ಗ್ರೇಟರ್ ಬೆಂಗಳೂರು ಹೆಸರಲ್ಲಿ ನಡೆಯುತ್ತಿದೆ ಭೂಮಿಯನ್ನು ಕಿತ್ತುಕೊಳ್ಳುವುದು ನಡೆಯುತ್ತಿದೆ ಎಂದು ಆರೋಪಿಸಿದರು.

ಈ ಸುದ್ದಿಯನ್ನೂ ಓದಿ | Rain Damage: ಅತಿವೃಷ್ಟಿಯಿಂದ ತತ್ತರಿಸಿದ್ದ ರೈತರಿಗೆ ಕೇಂದ್ರದಿಂದ ಗುಡ್‌ ನ್ಯೂಸ್‌; ಬೆಂಬಲ ಬೆಲೆಯಲ್ಲಿ 5 ಧಾನ್ಯಗಳ ಖರೀದಿಗೆ ಅಸ್ತು

ಏರ್‌ಪೋರ್ಟ್ ಮಾಡುವುದಕ್ಕೆ 50 ಸಾವಿರ ಎಕರೆ ಭೂಮಿ ಬೇಕು

ಏರ್‌ಪೋರ್ಟ್ ಮಾಡುವುದಕ್ಕೆ 50 ಸಾವಿರ ಎಕರೆ ಭೂಮಿ ಬೇಕು. ಇದಕ್ಕೆ ಯಾವ ಸಮಾಜದ ಜಮೀನು ಜಾಸ್ತಿ ಹೋಗುತ್ತಿದೆ? ಬೇರೆ ಸಮಾಜಗಳ ಜನರ ಭೂಮಿ ಸಣ್ಣ ಪುಟ್ಟ ಪ್ರಮಾಣದಲ್ಲಿ ಹೋಗಿರಬಹುದು. ಆದರೆ ಹೆಚ್ಚಿನ ಭೂಮಿ ಕಳೆದುಕೊಂಡಿದ್ದು ಒಕ್ಕಲಿಗರು. ಜಮೀನು ಮಾರಿ ಯಾವುದೋ ಒಂದು ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆಲ್ಲ ಏನ್ ಕೊಟ್ಡಿದ್ದಾರೆ? ನನ್ನ ಪ್ರಕಾರ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ನಡೆ ನೋಡಿದರೆ ಇದು ಕಾಂತರಾಜ್ ವರದಿಗಿಂತಲೂ ಕೆಟ್ಟದಾಗಿ ಇರುತ್ತದೆ. ಈ ಬಗ್ಗೆ ಯಾವ ಸಂಶಯವೂ ಬೇಡ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಳವಳ ವ್ಯಕ್ತಪಡಿಸಿದರು.