ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ, ವಿಧಾನಸಭೆಗಷ್ಟೇ ಬಿಜೆಪಿ, ಜೆಡಿಎಸ್ ಮೈತ್ರಿ (JDS-BJP alliance) ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ (Karnataka local body elections) ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದು ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ. ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿಗೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ಲೋಕಸಭೆ ಚುನಾವಣೆಯಲ್ಲಿ ಉತ್ತಮ ಮೈತ್ರಿ ಆಗಿದೆ. ಅದು ವಿಧಾನಸಭೆ ಚುನಾವಣೆಯಲ್ಲಿ ಕೂಡ ಮುಂದುವರಿಯುತ್ತದೆ. ಆದರೆ ಪಕ್ಷ ಕಟ್ಟುವ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಹಳ ಮುಖ್ಯ. ಸ್ಥಳೀಯ ಚುನಾವಣೆಯ ಸೀಟು ಹಂಚಿಕೆ ಬಗ್ಗೆ ನರೇಂದ್ರ ಮೋದಿ ಅವರು, ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಲು ಆಗುತ್ತದೆಯೇ? ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಜೆಡಿಎಸ್ ಮತ್ತು ಬಿಜೆಪಿ ನಡುವೆ ಸಂಬಂಧ ಚೆನ್ನಾಗಿದೆ. ನರೇಂದ್ರ ಮೋದಿ ಅವರು ಹಾಗೂ ಅಮಿತ್ ಶಾ ಅವರೊಂದಿಗೆ ನಮ್ಮ ಬಾಂಧವ್ಯ ಉತ್ತಮವಾಗಿದೆ. ನಮ್ಮ ಶಕ್ತಿ ಎಲ್ಲೆಲ್ಲಿ ಇದೆಯೋ ಅಲೆಲ್ಲಾ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ನಗರ ಪಾಲಿಕೆಗಳಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತೇವೆ. ಈ ಸಂಬಂಧ ರಾಜ್ಯ ಬಿಜೆಪಿ ಅಧ್ಯಕ್ಷರು ನೀಡಿರುವ ಹೇಳಿಕೆ ತಪ್ಪು ಎಂದು ನಾನು ಹೇಳಲಾರೆ ಎಂದರು ದೇವೇಗೌಡರು.
ನಾಳೆಯೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ ಬರುತ್ತೆ: ಬಿ.ವೈ.ವಿಜಯೇಂದ್ರ
ಪಕ್ಷದ ಸಂಘಟನೆಯ ಬಗ್ಗೆ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಜತೆ ಮಾತನಾಡಿದ್ದೇನೆ. ಹಾಸನದಲ್ಲಿ ಜನವರಿ 23ರಂದು, ಬೆಂಗಳೂರಿನಲ್ಲಿ ಜನವರಿ 18ರಂದು ಸಭೆಗಳನ್ನು ಮಾಡುತ್ತಿದ್ದೇವೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ಮುಂದಿನ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ನಾವು ಎನ್ಡಿಎ ಮೈತ್ರಿಕೂಟದಲ್ಲಿಯೇ ಇರುತ್ತೇವೆ. ಹಾಗೆಯೇ; ವಿಧಾನ ಪರಿಷತ್ 4 ಸ್ಥಾನಗಳ ಚುನಾವಣೆಯಲ್ಲಿ ಒಂದು ಸ್ಥಾನ ಜೆಡಿಎಸ್ಗೆ ಮತ್ತು 3 ಸ್ಥಾನ ಬಿಜೆಪಿಗೆ ಹಂಚಿಕೆಯಾಗುವ ಬಗ್ಗೆ ಪ್ರಾಥಮಿಕ ಮಟ್ಟದಲ್ಲಿ ಚರ್ಚೆ ಆಗಿದೆ ಎಂದು ಮಾಜಿ ಪ್ರಧಾನಿಗಳು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬೆಂಗಳೂರು ನಗರದಲ್ಲಿಯೂ ಪಕ್ಷ ಸಂಘಟನೆ ಮಾಡುವ ಬಗ್ಗೆ ಕೆಲಸ ಮಾಡುತ್ತಿದ್ದೇವೆ. ಸುಮ್ಮನೆ ಕೂರುವುದು ನನಗೆ ಇಷ್ಟವಿಲ್ಲ. ಹೀಗಾಗಿ ಪಕ್ಷ ಕಟ್ಟುವ ಕೆಲಸದಲ್ಲಿ ನಾನು ತೊಡಗಿದ್ದೇನೆ. ಎಲ್ಲಿಗೆ ಕರೆದರೂ ಹೋಗುತ್ತೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.
ಅಭಿವೃದ್ಧಿಗೆ ಅಸಹಕಾರಕ್ಕೆ ಬೇಸರ:
ಕೇಂದ್ರ ಸಚಿವ ಕುಮಾರಸ್ವಾಮಿ ಅವರು ರಾಜ್ಯಕ್ಕೆ ಒಳ್ಳೆಯದು ಮಾಡಬೇಕು ಎಂದು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿಲ್ಲ. ಹೆಚ್.ಎಂ.ಟಿ ಕಾರ್ಖಾನೆ ಪುನಶ್ಚೇತನಕ್ಕೆ ಅವರು ಶ್ರಮಿಸುತ್ತಿದ್ದಾರೆ. ಅದಕ್ಕೆ ರಾಜ್ಯ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ಹಿಂದೆ ನೀಡಲಾಗಿರುವ ಭೂಮಿಯನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಈ ಸರಕಾರ ಅಡ್ಡಿ ಮಾಡುತ್ತಿದೆ ಎಂದು ಮಾಜಿ ಪ್ರಧಾನಿಗಳು ಬೇಸರ ವ್ಯಕ್ತಪಡಿಸಿದರು.
ಹಾಗೆಯೇ ಭದ್ರಾವತಿಯಲ್ಲಿ ಮೈಸೂರು ಮಹಾರಾಜರು, ಸರ್ ಎಂ ವಿಶ್ವೇಶ್ವರಯ್ಯ ಅವರು ಕಟ್ಟಿದ ಉಕ್ಕು ಕಾರ್ಖಾನೆಯನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಅವರು ಕಷ್ಟಪಡುತ್ತಿದ್ದಾರೆ. ಅದನ್ನು ಪುನಶ್ಚೇತನ ಮಾಡಬೇಕಾದರೆ ಕಬ್ಬಿಣದ ಅದಿರು ಬೇಕಾಗುತ್ತದೆ. ಅದಕ್ಕೂ ರಾಜ್ಯ ಸರ್ಕಾರ ಸಹಕಾರ ಕೊಡುತ್ತಿಲ್ಲ. ಹೀಗಾದರೆ ಹೇಗೆ ರಾಜ್ಯ ಅಭಿವೃದ್ಧಿ ಆಗುತ್ತದೆ ಎಂದು ದೂರಿದರು ಅವರು.
ಅಹಿಂದ; ಸಿದ್ದರಾಮಯ್ಯಗೆ ಸವಾಲು ಹಾಕಿದ ಗೌಡರು:
ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸಮಾವೇಶ ಮಾಡುತ್ತಿದ್ದಾರೆ ಎಂದು ಪತ್ರಿಕೆಯಲ್ಲಿ ಸುದ್ದಿ ಓದಿದೆ. ಅದರ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ನೀಡಿರುವ ಹೇಳಿಕೆಯನ್ನು ಕೂಡ ನಾನು ಓದಿದ್ದೇನೆ. ಜನವರಿ 25ರಂದು ಅಹಿಂದ ಸಮಾವೇಶ ಮಾಡುತ್ತಾರಂತೆ. ನಾವು 23ರಂದು ಹಾಸನದಲ್ಲಿ ಸಮಾವೇಶ ಮಾಡುತ್ತೇವೆ. ಈ ಅಹಿಂದಾ ವ್ಯಾಖ್ಯಾನ ಏನು? ಇಡೀ ದೇಶದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ಮೀಸಲು ಕೊಟ್ಟವರು ಯಾರು? ಮುಸ್ಲಿಮರಿಗೂ ಮೀಸಲು ಕೊಟ್ಟವರು ಯಾರು? ನಾಯಕ ಸಮಾಜಕ್ಕೆ ಮೀಸಲಾತಿ ಕೊಟ್ಟವರು ಯಾರು? ನಾನು ವಸತಿ ಶಾಲೆಗಳನ್ನು ಕೊಟ್ಟೆ. ನಾನು ದೆಹಲಿಗೆ ಹೋದ ಮೇಲೆ ಇದೇ ಸಿದ್ದರಾಮಯ್ಯ ಹಣಕಾಸು, ಅಬಕಾರಿ ಮಂತ್ರಿ ಹಾಗೂ ಉಪ ಮುಖ್ಯಮಂತ್ರಿ, ಆಮೇಲೆ ಜೆ.ಎಚ್. ಪಟೇಲ್ ಮುಖ್ಯಮಂತ್ರಿ. ನಂತರ ಎಸ್.ಎಂ. ಕೃಷ್ಣ ಬಂದರು. ವಸತಿ ಶಾಲೆಗಳ ಕಥೆ ಏನಾಯಿತು? ಸಿದ್ದರಾಮಯ್ಯ ಅವರನ್ನು ಗುರುತಿಸಿದ್ದು ನಾನು ಎಂದು ಹೇಳಲ್ಲ, ಅವರೇ ಹೇಳಿಕೊಳ್ಳಲಿ. ನನ್ನ ಬಗ್ಗೆ ಅವರು ಎಷ್ಟು ಬೇಕಾದರೂ ಕಠಿಣವಾಗಿ ಮಾತನಾಡಲಿ. ಈ ಅಹಿಂದವನ್ನು ಯಾವ ಲೇಬಲ್ ಇಟ್ಟುಕೊಂಡು ಮಾಡಿದಿರಿ? ಒಳ ಮೀಸಲಾತಿಯಲ್ಲಿ ಯಾವ ಯಾವ ಸಮುದಾಯಕ್ಕೆ ಎಷ್ಟೆಷ್ಟು ಹೋಗಿದೆ ಎಂದು ಹೇಳಿದರೆ, ನಿಮ್ಮ ಬಜೆಟ್ ಗಳ ಬಗ್ಗೆ ಮಾತಾಡೋಣವ? ಚರ್ಚೆ ಮಾಡೋಣವಾ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮಾಜಿ ಪ್ರಧಾನಿಗಳು ಸವಾಲು ಹಾಕಿದರು.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಟಿ. ಎ. ಶರವಣ, ಟಿ.ಎನ್. ಜವರಾಯಿ ಗೌಡ, ಪಕ್ಷದ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ. ಎ.ತಿಪ್ಪೇಸ್ವಾಮಿ, ಚೌಡರೆಡ್ಡಿ ತೂಪಲ್ಲಿ, ನಗರ ಘಟಕದ ಮಾಜಿ ಅಧ್ಯಕ್ಷ ಪ್ರಕಾಶ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ, ಕಾನೂನು ಘಟಕದ ಅಧ್ಯಕ್ಷ ಎ.ಪಿ. ರಂಗನಾಥ್, ಯಲಹಂಕ ಯುವ ಮುಖಂಡ ಪ್ರವೀಣ್ ಮುಂತಾದವರು ಉಪಸ್ಥಿತರಿದ್ದರು.
ಸ್ಯಾನ್ಸನ್ ಗ್ರೂಪ್ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗ: ಕುಮಾರಸ್ವಾಮಿಗೆ ಎಂ.ಬಿ. ಪಾಟೀಲ್ ಪತ್ರ
ಶಾಮನೂರು ಶಿವಶಂಕರಪ್ಪ ಅವರನ್ನು ಸ್ಮರಿಸಿದ ಗೌಡರು
ಇತ್ತೀಚೆಗೆ ಅಗಲಿದ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದ ದೇವೇಗೌಡರು; ನಾನು ಅವರ ಶಿವಗಣಾರಾಧನೆಯಲ್ಲಿ ಭಾಗಿಯಾಗಬೇಕಿತ್ತು. ಅನಾರೋಗ್ಯದ ಕಾರಣದಿಂದ ದೂರ ಪ್ರಯಾಣ ಮಾಡಲು ಆಗುತ್ತಿಲ್ಲ. ದಿನ ಬಿಟ್ಟು ದಿನ ಡಯಾಲಿಸಿಸ್ಗೆ ಒಳಗಾಗುತ್ತಿದ್ದೇನೆ. ಹೀಗಾಗಿ ದಾವಣಗೆರೆಗೆ ಹೋಗಲಾಗುತ್ತಿಲ್ಲ. ಶಿವಶಂಕರಪ್ಪ ಮತ್ತು ನನ್ನದು ಐವತ್ತು ವರ್ಷಗಳ ಸುದೀರ್ಘ ಸ್ನೇಹ. ನಾನು ಲೋಕೋಪಯೋಗಿ ಸಚಿವರಾಗಿದ್ದಾಗ ನನ್ನ ಒಡನಾಡಿಯಾಗಿ ಕೆಲಸ ಮಾಡಿದ್ದರು ಎಂದರು.