MB Patil: 3,500.86 ಕೋಟಿ ರೂ. ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ: ಎಂ.ಬಿ.ಪಾಟೀಲ್
MB Patil: ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿಯ 152ನೇ ಸಭೆಯಲ್ಲಿ, ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ನ (ಕೆಎಸ್ಡಿಎಲ್) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು 69 ಯೋಜನೆಗಳ ಒಟ್ಟು ₹3,500.86 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ.


ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ನ (ಕೆಎಸ್ಡಿಎಲ್) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ ಉತ್ತೇಜಿಸಲು ಮತ್ತು ಉದ್ಯೋಗ ಸೃಷ್ಟಿಸಲು ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿಯು, 69 ಯೋಜನೆಗಳ ಒಟ್ಟು ₹3,500.86 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಪ್ರಸ್ತಾವಗಳಿಗೆ ಅನುಮೋದನೆ ನೀಡಿದೆ. ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ (MB Patil) ಅವರ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿಯ 152ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ರಾಜ್ಯದಲ್ಲಿ 24,954 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ʼತುಮಕೂರು, ವಿಜಯಪುರ, ರಾಮನಗರ, ಕೋಲಾರ, ಬೆಳಗಾವಿ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಈ ಹೊಸ ಕೈಗಾರಿಕೆಗಳು ಅಸ್ತಿತ್ವಕ್ಕೆ ಬರಲಿವೆ. ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ಕೈಗಾರಿಕೆಗಳಲ್ಲಿ ಮಷಿನ್ಟೂಲ್, ತಂಪು ಪಾನೀಯ, ಕಾರ್ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್, ಕಬ್ಬಿಣ ಮತ್ತು ಉಕ್ಕು, ಪರಿಶುದ್ಧ ಜಲಜನಕ ಅನಿಲ, ಹಾಲಿನ ಪುಡಿ ತಯಾರಿಕೆ ಘಟಕಗಳು ಇವೆʼ ಎಂದು ಸಚಿವ ಎಂ.ಬಿ. ಪಾಟೀಲ್ ಅವರು ತಿಳಿಸಿದ್ದಾರೆ.
₹ 50 ಕೋಟಿಗೂ ಹೆಚ್ಚು ಬಂಡವಾಳ ಹೂಡಿಕೆಯ 12 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ನೀಡಿರುವ ಅನುಮೋದನೆಗಳಿಂದ ₹ 2311.88 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 18,972 ಜನರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. ₹ 15 ಕೋಟಿಯಿಂದ ₹ 50 ಕೋಟಿ ಒಳಗಿನ ಬಂಡವಾಳ ಹೂಡಿಕೆಯ 55 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ ₹ 1148.98 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 5,832 ಜನರಿಗೆ ಉದ್ಯೋಗ ಅವಕಾಶಗಳು ಲಭ್ಯವಾಗಲಿವೆ. ʼಹೆಚ್ಚುವರಿ ಬಂಡವಾಳ ಹೂಡಿಕೆಯ 2 ಯೋಜನೆಗೆ ನೀಡಿರುವ ಅನುಮೋದನೆಯಿಂದ ₹ 40 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 150 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿವೆ ಎಂದು ಸಚಿವ ಎಂ.ಬಿ.ಪಾಟೀಲ್ ವಿವರಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | Karnataka Weather: ನಾಳೆ ದಕ್ಷಿಣ ಕನ್ನಡ, ಕೊಡಗು ಸೇರಿ ಈ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ
ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಸದಸ್ಯ ಡಾ. ಎನ್. ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ರಾಹುಲ್ ಎಸ್. ಸಂಕನೂರ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.