ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pralhad Joshi: ಮದ್ದೂರು ಕಲ್ಲು ತೂರಾಟ ಪ್ರಕರಣ; ಗಲಭೆ ತಡೆಗಟ್ಟುವ ಯೋಗ್ಯತೆಯೇ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕಿಲ್ಲ: ಜೋಶಿ ಕಿಡಿ

Pralhad Joshi: ಹಿಂದೂ ವಿರೋಧಿಗಳ ಮೇಲೆ ಕ್ರಮ ಕೈಗೊಳ್ಳುವ ಹಾಗೂ ಗಲಭೆ ತಡೆಯಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಯೋಗ್ಯತೆ ಇಲ್ಲದ ಈ ಸರ್ಕಾರ ಅಮಾಯಕರ ಮೇಲೆ, ಗಣೇಶ ಭಕ್ತರ ಮೇಲೆ ಲಾಠಿ ಪ್ರಹಾರ ಮಾಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಗಲಭೆ ತಡೆಗಟ್ಟುವ ಯೋಗ್ಯತೆಯೇ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ ಕಿಡಿ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ. -

Profile Siddalinga Swamy Sep 8, 2025 7:00 PM

ನವದೆಹಲಿ: ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೆರವಣಿಗೆಗೆ ಮಸೀದಿ ಮೇಲ್ಗಡೆಯಿಂದ ಕಲ್ಲು ತೂರಾಟ ನಡೆಸಿರುವುದು ಅಕ್ಷಮ್ಯ ಅಪರಾಧ. ʼಗಲಭೆ ತಡೆಗಟ್ಟುವ ಯೋಗ್ಯತೆಯೇ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕಿಲ್ಲʼ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕಿಡಿ ಕಾರಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಹಿಂದಿನ ಗಲಭೆ ಪ್ರಕರಣಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಮತಾಂಧ ಶಕ್ತಿಗಳಿಗೆ ಪ್ರೋತ್ಸಾಹ ಕೊಡುವ ರೀತಿ ನಡೆದುಕೊಂಡಿದ್ದರಿಂದಲೇ ಇಂಥ ಕೃತ್ಯಗಳು ಮರುಕಳಿಸಲು ಕಾರಣ ಎಂದು ಆರೋಪಿಸಿದರು.

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಿಲ್ಲ. ಹಾಗಾಗಿಯೇ ಕಲ್ಲು ತೂರಾಟ ನಡೆದಿದೆ. ಇನ್ನು, ಸೋಮವಾರ ಬೆಳಗ್ಗೆ ಗಣೇಶ ವಿಸರ್ಜನೆಗೆ ಮುಂದಾದ ಅಮಾಯಕರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಇದೆಲ್ಲಾ ಸರ್ಕಾರದ ಹಿಂದೂ ವಿರೋಧಿ ಮಾನಸಿಕತೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಖಂಡಿಸಿದರು.

ಹಿಂದೂ ವಿರೋಧಿಗಳ ಮೇಲೆ ಕ್ರಮ ಕೈಗೊಳ್ಳುವ ಹಾಗೂ ಗಲಭೆ ತಡೆಯಲು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಯೋಗ್ಯತೆ ಇಲ್ಲದ ಈ ಸರ್ಕಾರ ಅಮಾಯಕರ ಮೇಲೆ, ಗಣೇಶ ಭಕ್ತರ ಮೇಲೆ ಲಾಠಿ ಪ್ರಹಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣ ಹಿಂಪಡೆದದ್ದೇ ಕಾರಣ

ಈ ಹಿಂದೆ ಪೊಲೀಸ್‌ ಠಾಣೆ ಸುಟ್ಟು, ಪೊಲೀಸರನ್ನೇ ಕೊಲ್ಲಲು ಪ್ರಯತ್ನಿಸಿದಂತಹ ಪ್ರಕರಣವನ್ನೂ ರಾಜ್ಯ ಕಾಂಗ್ರೆಸ್‌ ಸರ್ಕಾರ ಹಿಂಪಡೆದಿದೆ. ಕೋಮು ಗಲಭೆಯಲ್ಲಿ PFI ಲಿಂಕ್‌ ಇರುವ ಅನೇಕ ಪ್ರಕರಣಗಳನ್ನು ಹಿಂಪಡೆದಿದೆ. ಹೀಗಾಗಿ ಮತಾಂಧ ಕಿಡಿಗೇಡಿಗಳಿಗೆ ಪ್ರೋತ್ಸಾಹ ಸಿಕ್ಕಂತಾಗಿದೆ. ಕಾಂಗ್ರೆಸ್‌ ಸರ್ಕಾರ ಒಂದು ಸಮುದಾಯದ ಓಲೈಕೆಗಿಳಿದ ಪ್ರತಿಫಲವಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಜೋಶಿ ಆರೋಪಿಸಿದರು.

ಧಾರವಾಡದ ನರೇಂದ್ರ ಗ್ರಾಮದಲ್ಲಿ ಅತ್ಯಂತ ಶಾಂತವಾಗಿ ನಡೆಯುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪೊಲೀಸ್‌ ಇನ್ಸಪೆಕ್ಟರ್‌ ಒಬ್ಬರು ಹೀಗೇ ಲಾಠಿ ಬೀಸಿದ್ದಾರೆ. ಕೇಳಿದರೆ ಎರೆಡು ಗಣೇಶ ಮೆರವಣಿಗೆ ಬರುತ್ತಿದ್ದವು ಎಂದಿದ್ದಾರೆ. ಇದ್ಯಾವ ನೀತಿ? ಎರಡು ಮೆರವಣಿಗೆ ಬರಬಾರದೇ? ಎಂದು ಪ್ರಶ್ನಿಸಿದರು.

ನಮ್ಮದೇ ಸರ್ಕಾರವೆಂಬ ಭಾವನೆ

ರಾಜ್ಯದಲ್ಲಿ ನಮ್ಮದೇ ಸರ್ಕಾರವಿದೆ. ನಾವೇನೇ ಮಾಡಿದರೂ ನಡೆಯುತ್ತದೆ ಎಂಬ ಭಾವನೆ ಒಂದು ವರ್ಗದಲ್ಲಿ ಮೂಡಿದೆ. ಹಾಗಾಗಿ ಕಿಡಿಗೇಡಿಗಳು ಇಂಥ ದುಸ್ಸಾಹಸಕ್ಕೆ ಕೈ ಹಾಕುತ್ತಿದ್ದಾರೆ. ಸರ್ಕಾರ ಮತಾಂಧ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೆ, ಪ್ರಕರಣ ಹಿಂಪಡೆಯುವುದು ಮತ್ತು ಅದಕ್ಕೆ ಪ್ರೋತ್ಸಾಹಕ ರೀತಿ ನಡೆದುಕೊಳ್ಳುತ್ತಿರುವುದೇ ಇದಕ್ಕೆಲ್ಲಾ ಕಾರಣ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಹಿಂದೂಗಳಿಗೆ, ಅಮಾಯಕರಿಗೆ, ಜನಸಾಮಾನ್ಯರಿಗೆ ಅನಗತ್ಯ ತೊಂದರೆ ಕೊಡುವುದು, ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಹಿಂದೂಗಳ ವಿರೋಧದ ನಡುವೆಯೂ ಬಾನು ಮುಷ್ತಾಕ್‌ ಅವರನ್ನೇ ಉದ್ಘಾಟನೆಗೆ ಕರೆದಿದ್ದು ಹಾಗೂ ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ನಡೆದುಕೊಂಡ ರೀತಿ ಇವೆಲ್ಲಾ ಮತಾಂಧ ಕ್ರಿಮಿನಲ್‌ಗಳಿಗೆ ಪ್ರೋತ್ಸಾಹ ಕೊಟ್ಟಂತಾಗಿದೆ ಎಂದು ಜೋಶಿ ಆರೋಪಿಸಿದರು.

ಮದ್ದೂರಿನಲ್ಲಿ ಹೋರಾಟದ ಎಚ್ಚರಿಕೆ

ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದ ಪರಮಾವಧಿಯಿಂದಾಗಿ ರಾಜ್ಯದಲ್ಲಿ ಕಾನೂನು‌ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಖಂಡಿಸಿದ ಸಚಿವರು, ಮದ್ದೂರಿನಲ್ಲಿ ಪೊಲೀಸರು ಅನಗತ್ಯವಾಗಿ ಗಣೇಶ ಭಕ್ತರಿಗೆ ತೊಂದರೆ ಕೊಡುವ ಕೆಲಸ ಮಾಡಿದರೆ ಅಲ್ಲಿಯೇ ದೊಡ್ಡ ಮಟ್ಟದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ರೈತರು, ಹಿಂದೂಪರ ಹೋರಾಟಗಾರರು ಹಾಗೂ ಅಮಾಯಕ ಅಧಿಕಾರಿಗಳ ಮೇಲೆ ದರ್ಪ ತೋರುತ್ತದೆ. ಆದರೆ, ಗಣೇಶ ಹಬ್ಬ ಹಾಗೂ ಹಿಂದೂಗಳ ಹಬ್ಬದಾಚರಣೆ ವೇಳೆ ಕಾಲು ಕೆದರಿಕೊಂಡು ಬರುವ ಆ ಒಂದು ಸಮುದಾಯದ ಮೇಲೇಕೆ ದರ್ಪ ತೋರುವುದಿಲ್ಲ? ಎಂದು ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದರು.

ದೇಶದ ಬೆನ್ನೆಲುಬು ರೈತರು ಎಂದಿಗೂ ಪ್ರಚಾರ ಬಯಸುವುದಿಲ್ಲ. ಬಡ ರೈತರು ಶ್ರಮಪಟ್ಟು ಬೆಳೆದ ಬೆಳೆ ಹಾನಿಯಾಗಿರುವುದಕ್ಕೆ ಪರಿಹಾರ ಮತ್ತು ನ್ಯಾಯಯುತ ಬೆಲೆ ಬಯಸುತ್ತಾರೆ. ಆದರೆ ರಾಜ್ಯ ಸರ್ಕಾರ ಪ್ರತಿ ಹಂತದಲ್ಲೂ ರೈತರನ್ನು ಅವಮಾನಿಸುತ್ತಿದೆ. ರೈತರ ಸಮಸ್ಯೆಗೆ ಸ್ಪಂದಿಸದೆ ಗರ್ವದಿಂದ ವರ್ತಿಸುತ್ತಿದೆ ಆರೋಪಿಸಿದರು.‌

ಈ ಸುದ್ದಿಯನ್ನೂ ಓದಿ | IBPS Recruitment 2025: ಬ್ಯಾಂಕ್‌ ಉದ್ಯೋಗಾರ್ಥಿಗಳಿಗೆ ಸಿಹಿ ಸುದ್ದಿ; ಬರೋಬ್ಬರಿ 13,217 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ IBPS

ಈ ಹಿಂದೆ ಸಂಕಷ್ಟ ತೋಡಿಕೊಂಡ ರೈತರನ್ನು ಕೋಪದಿಂದಲೇ ಎಚ್ಚರಿಸಿ ದುರಹಂಕಾರ ತೋರಿದ್ದರು ಡಿಸಿಎಂ ಡಿಕೆ ಶಿವಕುಮಾರ್‌. ಈಗ ಅದೇ ಕಾಂಗ್ರೆಸ್ಸಿನ ನಾಯಕರಾದ ಖರ್ಗೆ ಅವರು ರೈತರನ್ನು ಅವಮಾನಿಸಿದ್ದಾರೆ. ಇದೇ ಕಾಂಗ್ರೆಸ್‌ ಪಕ್ಷದ ನಿಜವಾದ ಮುಖ. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ರೈತರ ಘನತೆ-ಗೌರವಕ್ಕೆ ಬೆಲೆ ಕೊಡದೆ ರೈತ ಸಮುದಾಯವನ್ನು ತುಳಿಯುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ದೂರಿದರು.