ದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯದ ಚುಕ್ಕಾಣಿ ಹಿಡಿದಿರುವ ಪ್ರಲ್ಹಾದ್ ಜೋಶಿ ಅವರು ಆ ಖಾತೆಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಇಂದು ಮಾತನಾಡಿದ ಅವರು, ಪ್ರಧಾನಿ ಮೋದಿಜೀ ಅವರು ಜೋಶಿಯವರ ಬಗ್ಗೆ ವಿಶ್ವಾಸದಿಂದ ಈ ಖಾತೆ ನೀಡಿದ್ದಾರೆ. ಪ್ರಲ್ಹಾದ್ ಜೋಶಿ ಅವರು ತಳಮಟ್ಟದ ನಾಯಕರು. ಸೇವಾ ಮನೋಭಾವ ಉಳ್ಳವರು ಎಂದು ತಿಳಿಸಿದ್ದಾರೆ.
ಕರ್ನಾಟಕದ ಉಸ್ತುವಾರಿ ಆಗಿರುವ ಕಾರಣ ಅಲ್ಲಿನ ಪಕ್ಷದ ರಾಜಕೀಯ ನೇತಾರರ ವಿಚಾರ ಗೊತ್ತಿದೆ. ಜೋಶಿ ಅವರು ನಿರಂತರವಾಗಿ ಸಂಸದರಾಗಿ ದೊಡ್ಡ ಅಂತರದಿಂದ ಗೆಲುವು ಸಾಧಿಸುತ್ತಿದ್ದಾರೆ; ಜನತೆ ಮತ್ತು ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದಾರೆ ಎಂದು ವಿವರಿಸಿದರು.
ಸಂಸದೀಯ ವ್ಯವಹಾರ, ಕಲ್ಲಿದ್ದಲು ಖಾತೆ ಸಚಿವ ಸೇರಿದಂತೆ ವಿವಿಧ ಖಾತೆಗಳನ್ನು ನಿಭಾಯಿಸಿದವರು. ಸಮತೋಲನದಿಂದ ಕೆಲಸ ಮಾಡುವವರು ಎಂದು ತಿಳಿಸಿದರು.
ನಿಷ್ಠೆಯಿಂದ ಶಿಕ್ಷಣ ಖಾತೆ ನಿರ್ವಹಿಸುವೆ: ಪ್ರಲ್ಹಾದ್ ಜೋಶಿ
ದೆಹಲಿ: ಶಿಕ್ಷಣ ಖಾತೆ ಜವಾಬ್ದಾರಿಯನ್ನು ಮಾನವೀಯತೆಯಿಂದ, ನಿಷ್ಠೆಯಿಂದ ನಿರ್ವಹಿಸುವೆ. ಜತೆಗೆ ಈ ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸುವೆ ಎಂದು ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಹೆಚ್ಚುವರಿಯಾಗಿ ಶಿಕ್ಷಣ ಖಾತೆಯ ಜವಾಬ್ದಾರಿ ವಹಿಸಿರುವ ಬಗ್ಗೆ ಮಾಧ್ಯಮಗಳೊಂದಿಗೆ ಅವರು ಪ್ರತಿಕ್ರಿಯಿಸಿದ್ದಾರೆ.
ಪ್ರಧಾನಿ ನನ್ನ ಮೇಲೆ ನಂಬಿಕೆ ಇಟ್ಟು ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದಾರೆ. ಸಂಪೂರ್ಣ ನಮ್ರತೆ ಮತ್ತು ಜವಾಬ್ದಾರಿಯೊಂದಿಗೆ ನಾನು ಈ ಕರ್ತವ್ಯವನ್ನು ಪೂರೈಸುತ್ತೇನೆ. ಈ ಮಹತ್ವದ ಜವಾಬ್ದಾರಿಯನ್ನು ನನಗೆ ನೀಡಿದ್ದಕ್ಕಾಗಿ ಮತ್ತು ನನ್ನ ಮೇಲೆ ವಿಶ್ವಾಸವನ್ನು ಇರಿಸಿದ್ದಕ್ಕಾಗಿ ನಾನು ಪ್ರಧಾನಿಗೆ ಧನ್ಯವಾದ ಹೇಳುತ್ತೇನೆ. ಅವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ, ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಮತ್ತು ಈ ಇಲಾಖೆಯಲ್ಲಿನ ಅವರ ನಿರೀಕ್ಷೆಗಳನ್ನು ಪೂರೈಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.