ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯನ್ನು ಚುನಾಯಿಸುವವರೆಗೆ, ಹಂಗಾಮಿ ಸಭಾಪತಿಯಾಗಿ (Pro-tem Speaker) ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ (Puttanna) ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯವು ಅಧಿಸೂಚನೆ ಹೊರಡಿಸಿದೆ. ಭಾರತ ಸಂವಿಧಾನದ 184ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಪಾಲರು ಈ ಆದೇಶ ಮಾಡಿದ್ದು, ದಿನಾಂಕ 07.08.2026 ರಿಂದ ಜಾರಿಗೆ ಬರುವಂತೆ ಪುಟ್ಟಣ್ಣ ಅವರನ್ನು ತಾತ್ಕಾಲಿಕವಾಗಿ ವಿಧಾನ ಪರಿಷತ್ತಿನ ಸಭಾಪತಿ ಹುದ್ದೆಯ ಕರ್ತವ್ಯ ನಿರ್ವಹಿಸಲು ನೇಮಿಸಲಾಗಿದೆ.
ರಾಜ್ಯಪಾಲರ ಆದೇಶದಂತೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ. ಶ್ರೀಧರ್ ಅವರು ಈ ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ.
ಆ.13ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ
ಬೆಂಗಳೂರು: ಆಗಸ್ಟ್ 13ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ, ಶಿರಾ ಶಾಸಕ ಟಿಬಿ ಜಯಚಂದ್ರ (TB Jayachandra) ಕಾರ್ಯನಿರ್ವಹಿಸಲಿದ್ದಾರೆ.
ಆಗಸ್ಟ್ 13 ರಿಂದ 27ರ ವರೆಗೆ 10 ದಿನಗಳ ಕಾಲ ಮಳೆಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದ ಮೊದಲ ದಿನವಾದ ಗುರುವಾರ, ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್, ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ.
ಕಳೆದ ಸೋಮವಾರ ನಡೆದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸಚಿವರಾದ 19 ಸಚಿವರಿಗೆ ಖಾತೆಗಳನ್ನ ಹಂಚಿಕೆ ಮಾಡಬೇಕಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಸಚಿವರುಗಳಿಗೆ ಖಾತೆಗಳನ್ನು ಹಂಚುವ ಸಂಭವವಿದೆ. ಮುಂಗಾರು ಮಳೆ ಕೊರತೆಯಿಂದ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ, ಬಿಡದಿ ಟೌನ್ಶಿಪ್ ವಿಷಯಗಳು ಸದನಗಳಲ್ಲಿ ತೀವ್ರ ಚರ್ಚೆಯಾಗುವ ನಿರೀಕ್ಷೆಗಳಿವೆ.