ಮುಸ್ಲಿಂ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ಮೀಸಲು; ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೋಶಿ ಕಿಡಿ
Pralhad Joshi: ಕಾಂಗ್ರೆಸ್ ಸರ್ಕಾರ ಯಾವತ್ತೂ ಬರೀ ಅಲ್ಪಸಂಖ್ಯಾತರ ಓಲೈಕೆಯಲ್ಲೇ ತೊಡಗಿ ಮಹಾಪರಾಧ ಎಸಗುತ್ತಿದೆ. ಸಿಎಂ ಸಿದ್ದರಾಮಯ್ಯು ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ಕೇವಲ ಮುಸ್ಲಿಂ ಕಾಲೋನಿಗಳ ಅಭಿವೃದ್ಧಿಗಾಗೇ ₹600 ಕೋಟಿ ರೂ.ಮೀಸಲಿಟ್ಟು ನಿಜ ಸ್ವರೂಪ ಪ್ರದರ್ಶಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (ಸಂಗ್ರಹ ಚಿತ್ರ) -
ನವದೆಹಲಿ, ಮೇ 2: ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಸಾಂಪ್ರದಾಯಿಕ ಮತಬ್ಯಾಂಕ್ ಗಟ್ಟಿಭದ್ರ ಮಾಡಿಕೊಳ್ಳಲು SC ST, OBC ಸಮುದಾಯಗಳ ಹಕ್ಕನ್ನು ಲೂಟಿ ಮಾಡುತ್ತಿದೆ ಅಲ್ಲದೆ, ಸಂವಿಧಾನ ಕೊಲ್ಲುವ ನಡೆ ಅನುಸರಿಸುತ್ತಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವತ್ತೂ ಬರೀ ಅಲ್ಪಸಂಖ್ಯಾತರ ಓಲೈಕೆಯಲ್ಲೇ ತೊಡಗಿ ಮಹಾಪರಾಧ ಎಸಗುತ್ತಿದೆ. ಸಿಎಂ ಸಿದ್ದರಾಮಯ್ಯು ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೀಗ ಕೇವಲ ಮುಸ್ಲಿಂ ಕಾಲೋನಿಗಳ ಅಭಿವೃದ್ಧಿಗಾಗೇ ₹600 ಕೋಟಿ ರೂ.ಮೀಸಲಿಟ್ಟು ನಿಜ ಸ್ವರೂಪ ಪ್ರದರ್ಶಿಸಿದೆ ಎಂದು ಹೇಳಿದ್ದಾರೆ.
ಸಂವಿಧಾನದ ಪ್ರತಿ ಹಿಡಿದು 'ಸಂವಿಧಾನ ಉಳಿಸಿ' ಎಂದು ಸೋಗಲಾಡಿತನ ತೋರುವ ಕಾಂಗ್ರೆಸ್ ನಾಯಕರಿಗೆ ವಾಸ್ತವವಾಗಿ ಸಂವಿಧಾನದ ಮೇಲೆ ಕಿಂಚಿತ್ತೂ ಗೌರವವಿಲ್ಲ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸಾಂವಿಧಾನಿಕ ನ್ಯಾಯವನ್ನು ಗಾಳಿಗೆ ತೂರಿ, ಕೇವಲ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿದೆ ಎಂದು ಸಚಿವರು ದೂರಿದ್ದಾರೆ.
ಅನೇಕ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಕೊಡಲು ಹಿಂದಡಿ ಇಡುವ ರಾಜ್ಯ ಸರ್ಕಾರ, ಕೇವಲ ಮುಸ್ಲಿಂ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿಯಷ್ಟು ಬೃಹತ್ ಮೊತ್ತವನ್ನು ಮೀಸಲಿಡುತ್ತಿದೆ. ತನ್ನ ಮತಬ್ಯಾಂಕ್ ಭದ್ರಪಡಿಸಿಕೊಳ್ಳಲು ಇತರರ ಹಿತವನ್ನು ಕಡೆಗಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಸ್ಲಿಂ ಮತಗಳಿಗಾಗಿ ಇತರ ಹಕ್ಕು ಮೊಟಕು
ಈ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಮತ ಬ್ಯಾಂಕ್ಗಾಗಿ ನಮ್ಮ SC, ST ಮತ್ತು OBC ಸಮುದಾಯಗಳ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಮತಬ್ಯಾಂಕ್ ರಾಜಕಾರಣಕ್ಕಾಗಿ ಸಂವಿಧಾನವನ್ನೇ ಕೊಲ್ಲುವ ನಡೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಸಶಸ್ತ್ರ ಪಡೆಗಳಿಗೆ ಸಾವಯವ ಆಹಾರ ಪೂರೈಕೆಗೆ ಒತ್ತು; ಜೋಶಿ ನೇತೃತ್ವದಲ್ಲಿ ಭಾರತೀಯ ಸೇನೆಯ ಉನ್ನತ ಅಧಿಕಾರಿಗಳ ಸಭೆ
ಸಂವಿಧಾನದ ಪ್ರಕಾರ ನಡೆಯುವಂತೆ ಸುಪ್ರೀಂ ಕೋರ್ಟ್ ಹಲವು ಬಾರಿ ಎಚ್ಚರಿಸಿದ್ದರೂ ಕಾಂಗ್ರೆಸ್ ಪಕ್ಷ ಉದ್ದೇಶಪೂರ್ವಕವಾಗಿ ಅದನ್ನು ನಿರ್ಲಕ್ಷಿಸುತ್ತಿದೆ ಎಂದು ಸಚಿವರು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾವುದೇ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು, ವಿಶೇಷವಾಗಿ ಶೋಷಿತರನ್ನು ಸಮಾನವಾಗಿ ಕಾಣಬೇಕು. ಆದರೆ, ಸಿದ್ದರಾಮಯ್ಯ ಅವರ ಸರ್ಕಾರ ಕೇವಲ ಒಂದು ವರ್ಗದ ಪರವಾಗಿ ನಿಂತಿರುವುದು ಖಂಡನೀಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.