ಬೆಂಗಳೂರು, ಆ.24: ಭ್ರಷ್ಟ ನಾಗೇಂದ್ರ ಅವರನ್ನು ಸಂಪುಟದಿಂದ ಕೈ ಬಿಡಲು ಸರ್ಕಾರ ಮೀನಮೇಷ ಮಾಡುತ್ತಿದೆ. ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಿದರೆ ತಮ್ಮ ಬಣ್ಣ ಎಲ್ಲಿ ಬಯಲಾಗುತ್ತದೆ ಎಂಬ ಭಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭ್ರಷ್ಟಚಾರದ ಕರ್ಮಕಾಂಡ ಬೀದಿಗೆ ಬಂದು ಜನರಿಗೆ ಮುಖ ತೋರಿಸಲು ಸಾಧ್ಯವಾಗುವುದಿಲ್ಲ ಎಂದು ಅರಿತಿರುವ ಮುಖ್ಯಮಂತ್ರಿಗಳು ನಾಗೇಂದ್ರ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ದೂರಿದರು.
ಭ್ರಷ್ಟರನ್ನು ಈ ಸರ್ಕಾರ ರಕ್ಷಿಸುತ್ತಿದೆ. ಇದು ಭ್ರಷ್ಟರಿಂದ, ಭ್ರಷ್ಟರಿಗೋಸ್ಕರ ಹಾಗೂ ಭ್ರಷ್ಟರಿಗಾಗಿ ನಡೆಯುವ ಸರ್ಕಾರ. ಲೂಟಿಕೋರರಿಗೆ ಆಶ್ರಯ ನೀಡಿದೆ ಎಂದು ಆರೋಪಿಸಿದ ಅವರು, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಹೈಕಮಾಂಡಿನ ಹೊಟ್ಟೆ ತುಂಬಿಸಲು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಲೂಟಿ ಮಾಡಿದೆ. ಈ ಸರ್ಕಾರಕ್ಕೆ ಯಾವುದೇ ಕ್ಷಮೆ ಇಲ್ಲ ಎಂದು ಹೇಳಿದರು.
ಭಂಡತನದ ಸರ್ಕಾರ ಇದು
ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿರುವ ಬಗ್ಗೆ ಈ ಹಿಂದಿನ ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲೇ ಒಪ್ಪಿಕೊಂಡಿದ್ದರು. ನಾಗೇಂದ್ರ ಅವರ ವಿರುದ್ಧ ಆರೋಪಗಳಿವೆ ಎಂದು ಇತ್ತೀಚೆಗೆ ಸಚಿವ ಕೆ ಎಂ. ಶಿವಲಿಂಗೇಗೌಡ ಅವರೂ ಒಪ್ಪಿಕೊಂಡಿದ್ದಾರೆ. ಇಷ್ಟಾದರೂ ಭಂಡತನದ ಸರ್ಕಾರ ಒಪ್ಪಿಕೊಳ್ಳುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಉದ್ಯಾನಗಳನ್ನು ಲಪಟಾಯಿಸಲು ರಾಜ್ಯ ಸರ್ಕಾರ ಸಂಚು: ಬಿ.ವೈ. ವಿಜಯೇಂದ್ರ
ನಾವು ಜನತೆಯ ಮುಂದೆ ಹೋಗುತ್ತೇವೆ. ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಮಧ್ಯಸ್ಥಿಕೆ ವಹಿಸಿ ರಾಜ್ಯ ಸರ್ಕಾರದ ಕಿವಿ ಹಿಂಡಬೇಕು ಎಂದು ಆಗ್ರಹಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು.