ಬೆಂಗಳೂರು: ಕಾಂಗ್ರೆಸ್ನ ಚುನಾವಣಾ ಚಾಣಕ್ಯ ಎಂದೇ ಹೆಸರಾಗಿರುವ ಸುನೀಲ್ ಕನುಗೋಳು (Sunil Kanugolu) ಅವರನ್ನು ಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರ ಮುಖ್ಯ ಸಲಹೆಗಾರರನ್ನಾಗಿ ರಾಜ್ಯ ಸರ್ಕಾರ ನೇಮಿಸಿದೆ. ಸುನಿಲ್ ಕನುಗೋಳು ಹಿಂದಿನ ಸಿಎಂ ಸಿದ್ದರಾಮಯ್ಯರಿಗೂ ಸಲಹೆಗಾರರಾಗಿ ನೇಮಿಸಲಾಗಿತ್ತು. ಇದೀಗ ಅವರನ್ನು ಸಿಎಂ ಡಿ.ಕೆ.ಶಿವಕುಮಾರ್ ಮುಖ್ಯ ಸಲಹೆಗಾರರನ್ನಾಗಿ ನೇಮಿಸಲಾಗಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಸುನೀಲ್ ಕನುಗೋಳು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಯವರ ಮುಖ್ಯ ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಯಾರು ಈ ಸುನೀಲ್ ಕನುಗೋಳು?
ಬಳ್ಳಾರಿ ಮೂಲದವರಾದ ಸುನೀಲ್ ಕನುಗೋಳು ಅವರು 2017-18ರ ವೇಳೆ ಬಿಜೆಪಿ ಪರ ಚುನಾವಣಾ ತಂತ್ರಗಾರರಾಗಿ ಕೆಲಸ ಮಾಡಿದ್ದರು. ಅದಲ್ಲದೇ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ತಂಡದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಬಳಿಕ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ಗೆ ಹತ್ತಿರವಾದರು.
ಈ ಹಿಂದಿನ ಬಿಜೆಪಿ ಸರ್ಕಾರದ ಕಮಿಷನ್ ಆರೋಪವನ್ನು ಜನರ ಬಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮಾಡಿದ್ದ ಪೇಸಿಎಂ ಅಭಿಯಾನದ ಹಿಂದಿನ ರೂವಾರಿ ಇವರೇ. ಬಿಜೆಪಿ ವಿರುದ್ಧ ಡಿಜಿಟಲ್ ಅಭಿಯಾನ, ಚುನಾವಣಾ ತಂತ್ರಗಾರಿಕೆ ಹಿಂದಿನ ರೂವಾರಿ ಕೂಡ ಇವರಾಗಿದ್ದರು. ಇದಲ್ಲದೇ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಮುಖ್ಯ ಪಾತ್ರವಹಿಸಿದ್ದರು. ಚುನಾವಣಾ ಪೂರ್ವ ಗ್ಯಾರಂಟಿ ಕಾರ್ಡ್ಗಳನ್ನು ಹಂತ ಹಂತವಾಗಿ ಘೋಷಿಸಿ ಜನರ ಮನಮುಟ್ಟುವಂತೆ ಮಾಡುವಲ್ಲಿ ಕನುಗೋಳು ಪಾತ್ರ ಪ್ರಮುಖವಾಗಿದೆ. ಹಾಗಾಗಿ ಇದೀಗ ಅವರನ್ನು ಮತ್ತೆ ಸಿಎಂ ಮುಖ್ಯ ಸಲಹೆಗಾರನಾಗಿ ನೇಮಿಸಿ ಆದೇಶ ಹೊರಡಿಸಿದೆ.