ಬೆಂಗಳೂರು, ಜೂ.6: ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜೀನಾಮೆ ಅಂಗೀಕರಿಸುವುದಿಲ್ಲ ಎಂದು ಸಿಎಂ ಡಿ.ಕೆ. ಶಿವಕುಮಾರ್ (CM DK Shivakumar) ಹೇಳಿದರು. ವಿಧಾನಸೌಧದಲ್ಲಿ ಮಾಜಿ ಸಿಎಂ ದೇವರಾಜ ಅರಸು ಅವರ ಪುಣ್ಯಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಅವರು ಪ್ರತಿಕ್ರಿಯೆ ನೀಡಿದರು.
ಶುಕ್ರವಾರ ರಾತ್ರಿ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ವಿಚಾರವಾಗಿ ಕೇಳಿದಾಗ, ‘ಅನಗತ್ಯವಾಗಿ ತಲೆಕೆಡಿಸಿಕೊಂಡು ಏನೇನೋ ಸ್ಟೋರಿ ಮಾಡಬೇಡಿ. ಅವರು ರಾಜೀನಾಮೆಯನ್ನು ವಾಟ್ಸಾಪ್ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆʼ ಎಂದು ತಿಳಿಸಿದರು.
ರಾಜ್ಯಸಭೆಗೆ 3, ವಿಧಾನ ಪರಿಷತ್ತಿಗೆ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಇಂದು ನಾವು ಎಲ್ಲಾ ಐವರು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ರಾಜ್ಯಸಭೆ ಚುನಾವಣೆಗೆ 3 ಹಾಗೂ ವಿಧಾನ ಪರಿಷತ್ ಚುನಾವಣೆಗೆ 5 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಅವರನ್ನು ನಮ್ಮ ರಾಜ್ಯದಿಂದ ಕಣಕ್ಕೆ ಇಳಿಸಲಾಗಿದೆ. ಜತೆಗೆ ಎಐಸಿಸಿ ಕಾರ್ಯದರ್ಶಿ, ಯುವ ಮುಖಂಡ ಮನ್ಸೂರ್ ಅಲಿ ಖಾನ್ ಅವರಿಗೂ ಅವಕಾಶ ನೀಡಿದ್ದೇವೆ. ಕೆಪಿಸಿಸಿ ಅಧ್ಯಕ್ಷರೂ ಸೇರಿದಂತೆ ವಿಧಾನ ಪರಿಷತ್ ಚುನಾವಣೆಯ ಎಲ್ಲ ಐದು ಸ್ಥಾನಗಳಿಗೂ ಕಾಂಗ್ರೆಸ್ ಕಾರ್ಯಕರ್ತರಿಗೇ ಅವಕಾಶ ನೀಡಲಾಗಿದೆ ಎಂದರು.
ರಾಮಲಿಂಗಾರೆಡ್ಡಿ ನನಗೆ ಬಹಳ ಆಪ್ತರು, ಅವರೊಂದಿಗೆ ಮಾತನಾಡುವೆ ಎಂದ ಡಿ.ಕೆ. ಶಿವಕುಮಾರ್
ರಾಜಕೀಯ ಬಿಟ್ಟು ರಾಜ್ಯದ ಜನರ ಹಿತಕ್ಕಾಗಿ ಕೆಲಸ ಮಾಡೋಣ
ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ಧ ಜನರ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸಿಎಂ ಬದಲಾವಣೆಯಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ʼಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಶುಭ ಕೋರಿದ್ದಾರೆ. ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಾನು ಗೌರವಯುತವಾಗಿ ಹೋಗಿ ಅವರನ್ನು ಭೇಟಿ ಮಾಡುವೆ. ಅವರು ರಾಜಕಾರಣ ಮಾಡುವುದು ಬೇಡ, ನಾವು ರಾಜಕಾರಣ ಮಾಡುವುದು ಬೇಡ. ರಾಜ್ಯದ ಜನತೆಯ ಹಿತಕ್ಕಾಗಿ ನಾವು ಎಲ್ಲರೂ ಸೇರಿ ಏನು ಕೆಲಸ ಮಾಡಬೇಕೋ ಅದನ್ನು ಮಾಡೋಣʼ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.