ದುಬೈ: ಭಾನುವಾರ ರಾತ್ರಿ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ 4 ವಿಕೆಟ್ ಅಂತರದ ಗೆಲುವು ಸಾಧಿಸಿ ರೋಚಕ ಗೆಲುವು ಒಲಿಸಿಕೊಂಡಿತು. ಈ ಮೂಲಕ ಮೂರನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯಿತು. ಜತೆಗೆ 2000ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019 ಏಕದಿನ ವಿಶ್ವಕಪ್ ಸೆಮಿನಲ್ ಹಾಗೂ 2021ರ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಪ್ರಶಸ್ತಿ ಸುತ್ತಿನ ಸೋಲಿನ ಸೇಡು ತೀರಿಸಿಕೊಂಡಿತು. ಗೆಲುವು ಚಾಂಪಿಯನ್ ಪಟ್ಟ ಅಲಂಕರಿಸಿದ ರೋಹಿತ್ ಶರ್ಮ ಪಡೆ ಬಹುಮಾನ ಮೊತ್ತವಾಗಿ 19.45 ಕೋಟಿ ರೂ. ಪಡೆಯಿತು. ರನ್ನರ್ಅಪ್ ನ್ಯೂಜಿಲ್ಯಾಂಡ್ ತಂಡಕ್ಕೆ 9.72 ಕೋಟಿ ರೂ. ಲಭಿಸಿತು.
ಭಾರತದ ಗೆಲುವಿನಲ್ಲಿ ನಾಯಕ ರೋಹಿತ್ ಶರ್ಮ (76 ರನ್, 83 ಎಸೆತ, 7 ಬೌಂಡರಿ, 3 ಸಿಕ್ಸರ್) ಬಿರುಸಿನ ಆಟ ಹಾಗೂ ನಾಲ್ವರು ಸ್ಪಿನ್ನರ್ಗಳ ಬಿಗಿ ಬೌಲಿಂಗ್ ದಾಳಿ ಮತ್ತು ಕೊನೆಯ ಹಂತದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ಪ್ರಮುಖವಾಯಿತು.
ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ಬ್ಯಾಟಿಂಗ್ ಡೆರಿಲ್ ಮಿಚೆಲ್ (63 ರನ್, 101 ಎಸೆತ, 3 ಬೌಂಡರಿ) ಹಾಗೂ ಮಿಚೆಲ್ ಬ್ರೇಸ್ವೆಲ್ (53* ರನ್, 40 ಎಸೆತ, 3 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ನೆರವಿನಿಂದ ನಿಗದಿತ 50 ಓವರ್ಗಳಲ್ಲಿ 7 ವಿಕೆಟ್ಗೆ 251 ರನ್ಗಳ ಮೊತ್ತ ಕಲೆಹಾಕಿತು.
ಇದನ್ನೂ ಓದಿ IND vs NZ: ಯುಜ್ವೇಂದ್ರ ಚಹಲ್ ಜೊತೆ ಕಾಣಿಸಿಕೊಂಡ ಸುಂದರಿ ಯಾರು? ಇಲ್ಲಿದೆ ಮಾಹಿತಿ...
ಚೇಸಿಂಗ್ ವೇಳೆ ರೋಹಿತ್ ಶರ್ಮ ಹಾಗೂ ಶುಭಮಾನ್ ಗಿಲ್ (31) ಒದಗಿಸಿದ ಬಿರುಸಿನ ಆರಂಭ ಪಡೆಯಿತು. ಕೊಹ್ಲಿ(1) ವಿಫಲರಾದರು. ಶ್ರೇಯಸ್ ಅಯ್ಯರ್ (48 ರನ್, 62 ಎಸೆತ, 2 ಬೌಂಡರಿ, 2 ಸಿಕ್ಸರ್) ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ (29) ಸಣ್ಣ ಬ್ಯಾಟಿಂಗ್ ಹೋರಾಟ ನಡೆಸಿದರು. ಕೊನೆಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ (34* ರನ್, 33 ಎಸೆತ, 1 ಬೌಂಡರಿ, 1 ಸಿಕ್ಸರ್) ಉಪಯುಕ್ತ ಆಟದ ನೆರವಿನಿಂದ 49 ಓವರ್ಗಳಲ್ಲಿ 6 ವಿಕೆಟ್ಗೆ 254 ಭಾರತಕ್ಕೆ ಗೆಲುವು ತಂದುಕೊಟ್ಟರು.