ಬೆಂಗಳೂರು: ʻಸಶಕ್ತ ಕರ್ನಾಟಕʼ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ, ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್ಗಳನ್ನು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಆಯೋಜಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರೊಂದಿಗೆ 10 ಜಿಲ್ಲಾ ಕೇಂದ್ರಗಳಲ್ಲಿ ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್ಗಳನ್ನು ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಆಯೋಜನೆ ಮಾಡಲಾಗುವುದು. ಸೈಕ್ಲಿಂಗ್ ಕ್ರೀಡೆಗೆ ಉತ್ತೇಜನ ನೀಡಲು ಮೈಸೂರಿನಲ್ಲಿರುವ ದಟ್ಟಗಳ್ಳಿಯಲ್ಲಿ ಗುರುತಿಸಲಾದ ಜಾಗದಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಿಸಲಾಗುವುದು ಎಂದಿದ್ದಾರೆ.
ಮಾರ್ಚ್ 6 ರಂದು ವಿಧಾನ ಸಭೆಯಲ್ಲಿ 2026-27ರ ಬಜೆಟ್ ಮಂಡಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ, ಕನಕಪುರ, ಕುಕನೂರು ಮತ್ತು ಮಸ್ಕಿಯಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ತಲಾ ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ವಿಜ್ಞಾನ ಸೇವೆಗಳನ್ನು ಒದಗಿಸಲು ಕಲಬುರಗಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸಲಾಗುವುದು ಎಂದರು.
ಅಲ್ಲದೆ ಬೆಂಗಳೂರು ಹೊರವಲಯದಲ್ಲಿರುವ ಹೆಸರಘಟ್ಟ ಕೆರೆಯಲ್ಲಿ ಕಯಾಕಿಂಗ್ ಹಾಗೂ ಕನೋಯಿಂಗ್ ಸೆಂಟರ್ ಆಫ್ ಎಕ್ಸ್ಲೆನ್ಸ್ ಸ್ಥಾಪನೆ ಮಾಡಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುವುದು. ವಿಜಯನಗರ ಜಿಲ್ಲೆಯಲ್ಲಿರುವ ಕ್ರೀಡಾಂಗಣವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು KMERC ಅನುದಾನದಲ್ಲಿ ಮೇಲ್ದರ್ಜೆಗೇರಿಸಲಾಗುವುದು. ಮಕ್ಕಳ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸುಸಜ್ಜಿತ ಕ್ರೀಡಾ ತರಬೇತಿ ವಸತಿ ನಿಲಯವನ್ನು ವಿರಾಜಪೇಟೆಯಲ್ಲಿ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು. ಕುಸ್ತಿ ಪಟುಗಳನ್ನು ಪ್ರೋತ್ಸಾಹಿಸಲು ಬೆಳಗಾವಿಯ ಬೆಳಗುಂದಿಯಲ್ಲಿ ನೂತನ ಕುಸ್ತಿ ಅಖಾಡವನ್ನು ನಿರ್ಮಿಸಲಾಗುವುದು.