Tuesday, 22nd October 2024

Bengaluru Rain: ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರ ಸಾವು; ಅವಶೇಷಗಳಡಿ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ರಾಜಧಾನಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಸ್ಥಿತಿ ಸೃಷ್ಟಿಯಾಗಿದೆ. ಈ ನಡುವೆ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು (building collapse) ಮೂವರು ದುರ್ಮರಣ ಹೊಂದಿರುವ ಘಟನೆ ಮಂಗಳವಾರ ನಡೆದಿದೆ.

ನಗರದ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿದ್ದು, ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಇವರಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುತ್ತಿದ್ದು, ಈವರೆಗೆ ಮೂವರು ದುರ್ಮರಣ ಹೊಂದಿರುವುದಾಗಿ ತಿಳಿದು ಬಂದಿದೆ. ಇನ್ನುಳಿದಂತೆ ಅವಶೇಷಗಳಡಿ ಸಿಲುಕಿದ್ದ ಮೂವರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಈ ಸುದ್ದಿಯನ್ನೂ ಓದಿ | Bengaluru Rain: ರಾಜಧಾನಿಯಲ್ಲಿ ರಣ ಮಳೆ; ಯಲಹಂಕದ ಹಲವು ಅಪಾರ್ಟ್‌ಮೆಂಟ್‌ಗಳು ಜಲಾವೃತ, ಬೋಟ್‌ಗಳಲ್ಲಿ ಜನರ ಸ್ಥಳಾಂತರ

ಚರಂಡಿಯಲ್ಲಿ ಅರ್ಧ ಕಿ.ಮೀ. ಕೊಚ್ಚಿ ಹೋದ ವ್ಯಕ್ತಿ; ಸ್ಥಳೀಯರ ಸಮಯ ಪ್ರಜ್ಞೆಯಿಂದ ಬಚಾವ್!

Bengaluru Rain

ಬೆಂಗಳೂರು: ಬೆಂಗಳೂರು ಉತ್ತರ ಭಾಗದಲ್ಲಿ ಸೋಮವಾರ ರಾತ್ರಿ ಧಾರಾಕಾರ ಮಳೆ (Bengaluru Rain) ಸುರಿದ ಹಿನ್ನೆಲೆಯಲ್ಲಿ ಹಲವೆಡೆ ರಸ್ತೆಗಳು ಜಲಾವೃತವಾಗಿ, ಮನೆಗಳಿಗೆ ನೀರು ನುಗ್ಗಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ ಭಾರಿ ಮಳೆಗೆ ವ್ಯಕ್ತಿಯೊಬ್ಬರು ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ದೇವನಹಳ್ಳಿಯ ದೊಡ್ಡ ಸಾಗರದಲ್ಲಿ ನಡೆದಿದೆ.

ಚರಂಡಿಯಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಎಂಬಾತನನ್ನು ಸಿನಿಮೀಯ ರೀತಿಯಲ್ಲಿ ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ವೆಂಕಟೇಶ್​ ಎಂಬಾತ ಬಚಾವ್ ಆಗಿದ್ದಾರೆ.

ಸೋಮವಾರ ಸಂಜೆ ಸುಮಾರಿಗೆ ಗಾರೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೆಂಕಟೇಶ್, ಮಳೆ ನೀರಿನ ರಭಸಕ್ಕೆ ನಿಲ್ಲಲಾಗದೇ ಜಾರಿ ಚರಂಡಿಗೆ ಬಿದ್ದಿದ್ದಾರೆ. ಅರ್ಧ ಕಿಲೋ ಮೀಟರ್ ಕೊಚ್ಚಿಕೊಂಡು ಹೋಗಿದ್ದಾರೆ. ನಂತರ ಅವರನ್ನು ಗಮನಿಸಿದ ಗ್ರಾಮಸ್ಥರು ರಕ್ಷಿಸಿದ್ದಾರೆ.