Monday, 28th October 2024

BY Vijayendra: ಮೂರೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮಗೆ ಗೆಲುವು: ಬಿ.ವೈ. ವಿಜಯೇಂದ್ರ

BY Vijayendra

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಸೆ.2 ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. 40-45 ದಿನಗಳಲ್ಲಿ ದೇಶದಲ್ಲಿ 10 ಕೋಟಿ ಸದಸ್ಯರನ್ನು ನೋಂದಾಯಿಸಲಾಗಿದೆ. ಕರ್ನಾಟಕದಲ್ಲಿ 65 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೋಂದಾಯಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತಿಳಿಸಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ (BJP) ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು “ಸಂಘಟನಾ ಪರ್ವ” ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ 58 ಸಾವಿರ ಬೂತ್‍ಗಳಲ್ಲಿ ಸದಸ್ಯತ್ವ ನೋಂದಣಿ ಆಗಿದೆ. ಮುಂದಿನ ಹಂತದಲ್ಲಿ ಪಕ್ಷದ ಸಮಿತಿಗಳ ರಚನೆ ಮೊದಲಾದ ಸಂಘಟನಾ ಕಾರ್ಯ ನಡೆಯಲಿದೆ ಎಂದು ವಿವರಿಸಿದ ಅವರು, ಬೇರೆ ಯಾವುದೇ ರಾಜಕೀಯ ಪಕ್ಷಗಳಲ್ಲಿ ಇಷ್ಟೊಂದು ವ್ಯವಸ್ಥಿತ, ಕ್ರಮಬದ್ಧವಾದ ಸಂಘಟನಾತ್ಮಕ ಚಿಂತನೆ ಇಲ್ಲ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | R Ashok: ಕಾಂಗ್ರೆಸ್‌ ಸರ್ಕಾರದ ಕುಮ್ಮಕ್ಕಿನಿಂದ ರಾಜ್ಯದಲ್ಲೀಗ ಲ್ಯಾಂಡ್‌ ಜಿಹಾದ್‌; ಆರ್. ಅಶೋಕ್‌ ಆರೋಪ

ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿಲ್ಲ

ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಕೆಟ್ಟ ಸರ್ಕಾರ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಇದರ ಪರಿಣಾಮವಾಗಿ ಆಡಳಿತ ಪಕ್ಷದ ಶಾಸಕರೇ ತಮ್ಮ ಆಡಳಿತವನ್ನು ಟೀಕಿಸುತ್ತಿದ್ದಾರೆ ಎಂದು ದೂರಿದರು.

ರಾಜ್ಯ ಸರ್ಕಾರದ ಸ್ಪಂದನೆ ಶೂನ್ಯ

ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬರ- ಭೀಕರ ನೆರೆ ಸಂಕಷ್ಟವಿದ್ದರೂ ಸರ್ಕಾರದ ಸ್ಪಂದನೆ ಶೂನ್ಯವಾಗಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಮತ್ತು ಸಚಿವ ಸಂಪುಟವು 3 ಉಪ ಚುನಾವಣೆಯತ್ತ ಮುಖ ಮಾಡಿದೆ. 10- 10 ಸಚಿವರನ್ನು ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಜವಾಬ್ದಾರಿ ನೀಡಿದ್ದಾರೆ. ಶಾಸಕರನ್ನೂ ನಿಯೋಜಿಸಿದ್ದಾರೆ ಎಂದು ತಿಳಿಸಿದರು.

ಸರ್ಕಾರ, ಸಿಎಂ ವಿರುದ್ಧ ತೀವ್ರ ಜನಾಕ್ರೋಶ

ಹಣ, ಹೆಂಡ ಹಂಚಿ ಹೇಗಾದರೂ ಮಾಡಿ ಉಪ ಚುನಾವಣೆ ಗೆಲ್ಲಲು ಸೂಚಿಸಲಾಗಿದೆ. ರೈತ ವಿರೋಧಿ, ಅಭಿವೃದ್ಧಿ ವಿರೋಧಿ, ಜನವಿರೋಧಿ, ಪರಿಶಿಷ್ಟ ಸಮುದಾಯಗಳ ವಿರೋಧಿ ಸರ್ಕಾರ ಇದು. ಈ ದುಷ್ಟ ಸರ್ಕಾರ, ಭ್ರಷ್ಟ ಸಿಎಂ ವಿರುದ್ಧ ಜನಾಕ್ರೋಶ ತೀವ್ರವಾಗಿದೆ. 3 ಉಪ ಚುನಾವಣೆಗಳಲ್ಲಿ ಶಿಗ್ಗಾವಿ, ಸಂಡೂರಿನಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ. ಚನ್ನಪಟ್ಟಣದಲ್ಲಿ ಪಕ್ಷದ ಸ್ಥಾನಮಾನ ಪಡೆದಿದ್ದ ಮುಖಂಡ ಬೇರೆ ಪಕ್ಷಕ್ಕೆ ಹೋಗಿದ್ದು, ಅಲ್ಲಿನ ಜನತೆ, ಪ್ರಜ್ಞಾವಂತ ಮತದಾರರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Stock Market: ಷೇರು ಮಾರುಕಟ್ಟೆಯಲ್ಲಿ ಗೂಳಿ ನೆಗೆತ; ಸೆನ್ಸೆಕ್ಸ್‌, ನಿಫ್ಟಿಯಲ್ಲಿ ಚೇತರಿಕೆ

ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ವಿಧಾನಪರಿಷತ್ ಮಾಜಿ ಸದಸ್ಯ ಮತ್ತು ಸಂಘಟನಾ ಪರ್ವದ ಚುನಾವಣಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.