Thursday, 19th September 2024

Mandya violence: ದುಷ್ಕರ್ಮಿಗಳು ಯಾವುದೇ ಧರ್ಮದವರಾಗಿದ್ದರೂ ನಿರ್ದಾಕ್ಷಿಣ್ಯ ಕ್ರಮ: ಸಿಎಂ

CM Siddaramaiah

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲು ತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆ ತರುವ ಕಿಡಿಗೇಡಿಗಳ ದುಷ್ಕೃತ್ಯ (Mandya violence) ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿರುವ ಘಟನೆ ಕುರಿತು ಗುರುವಾರ ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Mandya Violence: ಮಂಡ್ಯ ಗಲಭೆ ಖಂಡಿಸಿ ಎಲ್ಲ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ

ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.