Monday, 16th September 2024

CM Siddaramaiah: ಕ್ಷಮೆ ಕೋರಿದ ಬೆಲ್ಲದ್‌ ನಡೆ ʼಮಾದರಿಯಾಗಲಿʼ ಎಂದು ಮೆಚ್ಚಿದ ಸಿಎಂ ಸಿದ್ದರಾಮಯ್ಯ

cm siddaramaiah arvind bellad

ಬೆಂಗಳೂರು: ಟೀಕಿಸುವ ಭರದಲ್ಲಿ ಮುಖ್ಯಮಂತ್ರಿಗಳ ಬಗ್ಗೆ ಅನುಚಿತ ಮಾತು ಬಳಸಿ ನಂತರ ಅದರ ಬಗ್ಗೆ ಕ್ಷಮೆ ಯಾಚಿಸಿ (Apology) ಪತ್ರ ಬರೆದಿರುವ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ, ಶಾಸಕ ಅರವಿಂದ ಬೆಲ್ಲದ (Arvind Bellad) ಅವರ ನಡೆಯನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಶ್ಲಾಘಿಸಿದ್ದಾರೆ. ಅರವಿಂದ ಬೆಲ್ಲದ ಅವರ ನಡೆ ಮೇಲ್ಪಂಕ್ತಿಯಾಗಲಿ ಎಂದು ಅವರು ಹಾರೈಸಿದ್ದಾರೆ.

ಜಿಂದಾಲ್‌ ಕಂಪನಿಗೆ ಕಡಿಮೆ ದರದಲ್ಲಿ ಜಮೀನು ಕೊಟ್ಟಿರುವ ವಿಚಾರದಲ್ಲಿ ಅರಮನೆ ಮೈದಾನದಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದ ಸಂದರ್ಭ ಸಿಎಂ ವಿರುದ್ಧ ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಅನುಚಿತ ಪದ ಬಳಸಿದ್ದರು. ರಾಜ್ಯದ ಜಮೀನು ಕಡಿಮೆ ದರಕ್ಕೆ ಜಿಂದಾಲ್‌ಗೆ ಕೊಟ್ಟಿರುವುದಕ್ಕೆ ಆಕ್ರೋಶ ಹೊರಹಾಕಿದ್ದ ಶಾಸಕ ಬೆಲ್ಲದ, “ಜಮೀನು ಸಿದ್ದರಾಮಯ್ಯನವರ ಅಪ್ಪನ ಮನೆ ಆಸ್ತಿನಾ” ಎಂದಿದ್ದರು. ನಂತರ ಈ ಪದ ಬಳಕೆ ಮಾಡಿರುವುದಕ್ಕಾಗಿ ಬೆಲ್ಲದ್ ಪತ್ರದ ಮೂಲಕ ಕ್ಷಮೆಯಾಚನೆ ಮಾಡಿದ್ದರು. “ನನ್ನ ಮಾತಿನ ಸಂದರ್ಭದಲ್ಲಿ ಬಳಕೆ ಮಾಡಿರುವ ಪದ ನನಗೆ ಶೋಭೆ ತಂದಿರುವುದಿಲ್ಲ. ಅದಕ್ಕಾಗಿ ಕ್ಷಮೆ ಯಾಚಿಸುತ್ತೇನೆ” ಎಂದು ಅವರು ಪತ್ರ ಬರೆದಿದ್ದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ಬೆಲ್ಲದ್‌ ಅವರ ನಡೆಯನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

“ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ” ಎಂದು ಸಿಎಂ ಹೇಳಿದ್ದಾರೆ.

https://x.com/siddaramaiah/status/1830906321220112638

“ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ” ಎಂದಿದ್ದಾರೆ.

“ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ” ಎಂದು ಸಿಎಂ ಬರೆದಿದ್ದಾರೆ.

ಈ ಸುದ್ದಿಯನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯಗೆ ಕ್ಷಮೆ ಕೋರಿದ ಶಾಸಕ ಅರವಿಂದ ಬೆಲ್ಲದ

Leave a Reply

Your email address will not be published. Required fields are marked *