Wednesday, 23rd October 2024

CP Yogeshwara: ಡಿಕೆಶಿ ನಿವಾಸದಲ್ಲಿ ಸಿಪಿ ಯೋಗೇಶ್ವರ್‌, ಇಂದು ಸಿಎಂ ಭೇಟಿ; ಕಾಂಗ್ರೆಸ್‌ನಿಂದ ಸ್ಪರ್ಧೆ ಖಚಿತ

channapatna bypoll

ರಾಮನಗರ: ಬಿಜೆಪಿಯ ಮಾಜಿ ವಿಧಾನ ಪರಿಷತ್‌ ಸದಸ್ಯ, ಚನ್ನಪಟ್ಟಣದ ಬೈ ಎಲೆಕ್ಷನ್‌ಗೆ (Channapatna By Election) ಬಿಜೆಪಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ (CP Yogeshwara) ಅವರು ಇಂದು ಮುಂಜಾನೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಅವರ ನಿವಾಸದಲ್ಲಿ ಕಾಣಿಸಿಕೊಂಡಿದ್ದಾರೆ.

ಜೊತೆಗೆ, ಸಿಪಿ ಯೋಗೇಶ್ವರ್‌ ಹಾಗೂ ಡಿಕೆ ಶಿವಕುಮಾರ್‌ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಬಿಜೆಪಿಯಿಂದ ಟಿಕೆಟ್‌ ವಂಚಿತರಾದ ಯೋಗೇಶ್ವರ್‌ ಅವರು ಇದರೊಂದಿಗೆ ಬಂಡಾಯ ಏಳುವುದು ಖಚಿತವಾಗಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸುವುದೂ ಬಹುತೇಕ ಖಚಿತವಾಗಿದೆ.

ಸಿ.ಪಿ. ಯೋಗೇಶ್ವರ್​ ಅವರು ಇಂದು (ಅ.23) ಬೆಳಗ್ಗೆ ಡಿ.ಕೆ. ಶಿವಕುಮಾರ್​ ನಿವಾಸದಲ್ಲಿ ಕಾಣಿಸಿಕೊಂಡಿದ್ದು, ಇಬ್ಬರು ಒಟ್ಟಿಗೆ ಕಾರಿನಲ್ಲಿ ಪ್ರಯಾಣಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ. ಹೀಗಾಗಿ ಯೋಗೇಶ್ವರ್​ ಅವರು ಕಾಂಗ್ರೆಸ್​ ಸೇರುವುದು ಖಚಿತವಾಗಿದ್ದು, ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಸಿ.ಪಿ. ಯೋಗೇಶ್ವರ್​ ರಾಜೀನಾಮೆ ನೀಡಿದ್ದರು. ಅ.21ರಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿದ ಯೋಗೇಶ್ವರ್​ ಅವರು ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು.

ಅವರ ಮುಂದಿನ ನಡೆ ಏನು ಎಂಬ ಪ್ರಶ್ನೆ ಹುಟ್ಟುಕೊಂಡಿತ್ತು. ಬಿಜೆಪಿಯಲ್ಲೇ ಇರುತ್ತಾರಾ? ಅಥವಾ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಾರಾ ಎಂಬ ಚರ್ಚೆಗಳು ಹುಟ್ಟಿಕೊಂಡಿದ್ದವು. ಇದೀಗ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಜತೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಕಾಂಗ್ರೆಸ್​ ಸೇರುತ್ತಾರೆ ಎಂಬ ವದಂತಿಗೆ ಅಧಿಕೃತ ಮುದ್ರೆಯನ್ನು ಒತ್ತಿದ್ದಾರೆ.

ರಾಜ್ಯದಲ್ಲಿ ಘೋಷಣೆಯಾದ ಮೂರು ಬೈಎಲೆಕ್ಷನ್‌ಗಳಲ್ಲಿ ಎರಡನ್ನು ತಾನು ಇಟ್ಟುಕೊಂಡ ಬಿಜೆಪಿ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಜೆಡಿಎಸ್‌ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್‌ ಅವರಿಗೆ ಬಿಜೆಪಿ ಮುಖಂಡರೂ ಒತ್ತಾಯಿಸಿದ್ದರು. ಆದರೆ ಈ ಒತ್ತಾಯಕ್ಕೆ ಮಣಿಯದ ಯೋಗೇಶ್ವರ್‌, ಸ್ಪರ್ಧಿಸಿದರೆ ಬಿಜೆಪಿಯಿಂದ ಮಾತ್ರ, ಇಲ್ಲವಾದರೆ ಇಲ್ಲ ಎಂಬ ಸ್ಪಷ್ಟ ಸಂದೇಶ ಕೊಟ್ಟಿದ್ದರು. ನಿನ್ನೆ ಮಾತನಾಡಿದ್ದ ಜೆಡಿಎಸ್‌ ಮುಖಂಡ ಎಚ್‌ಡಿ ಕುಮಾರಸ್ವಾಮಿ ಅವರು, “ಚನ್ನಪಟ್ಟಣದ ವಿಷಯದಲ್ಲಿ ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ಸಾಧ್ಯವಿಲ್ಲ” ಎಂದಿದ್ದರು.

ಇದನ್ನೂ ಓದಿ: C P Yogeshwar: ಬಿಜೆಪಿ ಎಂಎಲ್‌ಸಿ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ; ಚನ್ನಪಟ್ಟಣದಲ್ಲಿ ಸ್ವತಂತ್ರವಾಗಿ ಕಣಕ್ಕೆ!