Saturday, 28th September 2024

DK Shivakumar: ಬೆಳ್ಳಂದೂರು ರಸ್ತೆ ನಿರ್ಮಾಣಕ್ಕಾಗಿ ಭೂಮಿ ನೀಡಲು ರಕ್ಷಣಾ ಇಲಾಖೆ ಒಪ್ಪಿಗೆ: ಡಿ.ಕೆ. ಶಿವಕುಮಾರ್

DK Shivakumar

ಬೆಂಗಳೂರು: ಲೋವರ್ ಆಗರಂನಿಂದ ಸರ್ಜಾಪುರವರೆಗೂ ರಸ್ತೆ ಆಗಲೀಕರಣಕ್ಕೆ 12.34 ಎಕರೆ ಜಮೀನನ್ನು ರಕ್ಷಣಾ ಇಲಾಖೆ ಬಿಬಿಎಂಪಿಗೆ (BBMP) ನೀಡಿದೆ. ಇನ್ನೂ 10.77 ಎಕರೆ ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು. ಬೆಂಗಳೂರಿನ ಎಎಸ್‌ಸಿ ಸೆಂಟರ್ ಮತ್ತು ಕಾಲೇಜಿನ ಕಮಾಂಡೆಂಟ್ ಲೆಫ್ಟನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರ ಜತೆ ವಿಧಾನಸೌಧದಲ್ಲಿ ಶನಿವಾರ ಈ ಕುರಿತು ಡಿಸಿಎಂ ಸಮಾಲೋಚನೆ ನಡೆಸಿದರು.

ನಂತರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಎಂ.ಜಿ. ರಸ್ತೆಯಿಂದ ಬೆಳ್ಳಂದೂರು ಭಾಗಕ್ಕೆ ತೆರಳಲು ಸುಮಾರು 1 ಗಂಟೆ ಸಮಯ ಬೇಕಾಗಿತ್ತು. ಈ ರಸ್ತೆ ನಿರ್ಮಾಣವಾದ ನಂತರ 5-8 ನಿಮಿಷಗಳ ಅಂತರದಲ್ಲಿ ಕ್ರಮಿಸಬಹುದು ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | World Rabies Day 2024: ಮಾರಕ ರೇಬೀಸ್‌‌ನಿಂದ ಪಾರಾಗಲು ಏನು ಮಾಡಬೇಕು?

ನಾನು ಹಾಗೂ ಮುಖ್ಯಮಂತ್ರಿಗಳು ಕೇಂದ್ರ ರಕ್ಷಣಾ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆವು. ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವಾಲಯ ಸ್ಪಂದಿಸಿ, ಒಟ್ಟು 22 ಎಕರೆ ಜಾಗವನ್ನು ರಸ್ತೆಗಾಗಿ ಬಿಟ್ಟುಕೊಡಲು ತೀರ್ಮಾನಿಸಿ ಸಹಕಾರ ನೀಡಿದೆ ಎಂದರು.

ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ

ಈ ರಸ್ತೆ ನಿರ್ಮಾಣದ ಮೊದಲ ಹಂತದ 3.50 ಕಿ.ಮೀ ಕಾಮಗಾರಿಗೆ 35 ಕೋಟಿ ರೂ. ಮೊತ್ತದ ಟೆಂಡರ್ ಕರೆಯಲಾಗಿದೆ. ಟ್ರಿನಿಟಿ ಸರ್ಕಲ್, ಈಜಿಪುರ ಸೇರಿದಂತೆ ಒಂದಷ್ಟು ಕಡೆ ನೂತನ ರಸ್ತೆ ನಿರ್ಮಾಣಕ್ಕೆ ಇನ್ನು 10.77 ಎಕರೆ ಜಾಗವನ್ನು ರಕ್ಷಣಾ ಇಲಾಖೆ ನೀಡಬೇಕಿದೆ. ಇದರಿಂದ ಐಟಿ ಹಬ್‌ಗೆ ತೆರಳಲು ಇದ್ದ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಈಗಾಗಲೇ ರಕ್ಷಣಾ ಇಲಾಖೆಯವರು 12.34 ಎಕರೆ ಜಾಗವನ್ನು ಬಿಬಿಎಂಪಿಗೆ ಹಸ್ತಾಂತರಿಸಿದ್ದಾರೆ. ಇದಕ್ಕಾಗಿ ನಮಗೆ ಸಹಕಾರ ಕೊಟ್ಟ ಲೆಫ್ಟನೆಂಟ್ ಜನರಲ್ ಬಸಂತ್ ಕುಮಾರ್ ರೆಪ್ಸ್ವಾಲ್ ಅವರು ಇದೇ 30 ರಂದು ನಿವೃತ್ತಿಯಾಗುತ್ತಿದ್ದು, ಅವರನ್ನು ನಮ್ಮ ಕಚೇರಿಗೆ ಆಹ್ವಾನಿಸಿ ಅಭಿನಂದಿಸಿದ್ದೇವೆ ಎಂದು ತಿಳಿಸಿದರು.

ಈ ಯೋಜನೆಯಿಂದ ಸಾಕಷ್ಟು ಅನುಕೂಲ

ಬೆಂಗಳೂರಿನ ನಾಗರೀಕರಿಗೆ, ವಿಶೇಷವಾಗಿ ಐಟಿ ಹಬ್‌ಗೆ ತೆರಳುವವರಿಗೆ ಹಾಗೂ ಪೂರ್ವ ಬೆಂಗಳೂರಿಗರಿಗೆ ಈ ಯೋಜನೆಯಿಂದ ಸಾಕಷ್ಟು ಅನುಕೂಲವಾಗಲಿದೆ. ನಾನು ಬೆಂಗಳೂರು ನಗರಭಿವೃದ್ಧಿ ಇಲಾಖೆಯ ಜವಾಬ್ದಾರಿ ತೆಗೆದುಕೊಂಡ ನಂತರ ಬೆಳ್ಳಂದೂರು ಹಾಗೂ ಸುತ್ತಮುತ್ತಲ ಐಟಿ ಹಬ್ ಭಾಗದ ಜನರ ಸಮಸ್ಯೆ ಆಲಿಸಿದ್ದೆ. ಅಲ್ಲಿನ ಸಂಚಾರ ದಟ್ಟಣೆ ವಿಚಾರವಾಗಿ ದಿನನಿತ್ಯ 8-10 ಇ-ಮೇಲ್‌ಗಳು ನನಗೇ ಬರುತ್ತಿದ್ದವು. ಈ ಹಿನ್ನೆಲೆಯಲ್ಲಿ ನಾನು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆವು. ಈ ಸಮಸ್ಯೆಗೆ ಈಗ ಪರಿಹಾರ ಸಿಕ್ಕಿದಂತಾಗಿದೆ ಎಂದು ಹೇಳಿದರು.

ಹೆಬ್ಬಾಳದ ಬಳಿಯ ಹೋಪ್ ಡೈರಿ ಫಾರ್ಮ್ ಬಳಿ ಟನಲ್ ರಸ್ತೆಯ ಪ್ರವೇಶಕ್ಕೆ ಜಾಗ ಅಗತ್ಯವಿದೆ. ಇದಕ್ಕೆ ಎರಡು ಎಕರೆ ಜಾಗ ಬಿಟ್ಟುಕೊಡಬೇಕು ಎಂಬ ಪ್ರಸ್ತಾವನೆ ನೀಡಲಿದ್ದೇವೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಈ ಜಾಗಗಳನ್ನು ರಕ್ಷಣಾ ಇಲಾಖೆಯಿಂದ ಪಡೆಯಲು ನಾನು ಬಹಳಷ್ಟು ಪ್ರಯತ್ನ ಮಾಡಿದ್ದೇನೆ, ಕಾಗದದ ಕೆಲಸ ಮಾಡಿದ್ದೇನೆ. ನಿರಂತರವಾಗಿ ರಕ್ಷಣಾ ಇಲಾಖೆ ಜತೆ ಸಂಪರ್ಕ ಇಟ್ಟುಕೊಂಡು ಮನವಿ ಮಾಡಿದ್ದೇನೆ. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಕ್ಷಣಾ ಇಲಾಖೆ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Bomb Hoax: ಬೆಂಗಳೂರಿನ ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ಗೆ ಬಾಂಬ್ ಬೆದರಿಕೆ

ಭೂಮಿ ಹಸ್ತಾಂತರಕ್ಕೆ ರಕ್ಷಣೆ ಇಲಾಖೆ ಏನು ಬೇಡಿಕೆ ಇಟ್ಟಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ರಕ್ಷಣಾ ಇಲಾಖೆಯು ಭೂಮಿಗೆ ಪರ್ಯಾಯವಾಗಿ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವಂತೆ ಕೇಳಿದ್ದು, ನಾವು ಅದನ್ನು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದರು.