ಚಿಕ್ಕಮಗಳೂರು: ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ. ೧೯ ರಂದು ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳಲ್ಲಿ ಬೃಹತ್ ಇ-ಲೋಕ್-ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶುಭ ಗೌಡರ್ ಹೇಳಿದರು.
ಸೋಮವಾರ ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಎಡಿಆರ್ ಸಭಾಂಗಣದಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಆಯೋಜಿಸುವ ಬೃಹತ್ ಇ-ಲೋಕ್ ಆದಾಲತ್ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ದೇಶದಾದ್ಯಂತ ಕೋವಿಡ್-೧೯ ಕಾರಣದಿಂದಾಗಿ, ಬಹುತೇಕ ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿದ್ದು ಅವುಗಳನ್ನು ತ್ವರಿತ ಗತಿಯಲ್ಲಿ ಬಗೆಹರಿಸುವ ನಿಟ್ಟಿನಲ್ಲಿ, ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಸೆ. ೧೯ ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ನ್ಯಾಯಾಲಯಗಳ ಸಂಕೀರ್ಣಗಳಲ್ಲಿ ಬೃಹತ್ ಇ-ಲೋಕ್- ಆದಾಲತ್ ಆಯೋಜಿಸಲಾಗಿದ್ದು, ಪಕ್ಷಗಾರರು ತಮ್ಮ ಪ್ರಕರಣಗಳನ್ನು ಮುಂಚಿತವಾಗಿ ವಕೀಲರ ಮೂಲಕ ಅಥವಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಕರೆ ಅಥವಾ ಇಮೇಲ್ ಮಾಡುವ ಮೂಲಕ ತಿಳಿಸಿದ್ದಲ್ಲಿ ವಿಡಿಯೋ ಸಂವಾದದ ಮೂಲಕ ಪ್ರಕರಣಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.
ಕೊರೋನಾ ಹಿನ್ನೆಲೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಪಕ್ಷಗಾರರು ನೇರವಾಗಿ ನ್ಯಾಯಾಲಕ್ಕೆ ಹಾಜರಾಗದೆ ತಮ್ಮ ವಕೀಲರು ಅಥವಾ ಮನೆಯಲ್ಲಿಯೇ ಆಂಡ್ರಯ್ಡ್ ಮೊಬೈಲ್ ಅಥವಾ ಲ್ಯಾಪ್ಟಾಪ್ ಮೂಲಕ ಪ್ರಕರಣದ ಕುರಿತು ಸಂದಾನಕಾರರೊಂದಿಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಿ ವ್ಯಾಜ್ಯಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳ ಬಹುದಾಗಿದ್ದು ಇದರಿಂದ ಸಮಯ ಹಾಗೂ ಹಣದ ಉಳಿತಾಯವಾಗಲಿದ್ದು ಪ್ರಕರಣಗಳು ಶೀಘ್ರದಲ್ಲಿಯೇ ಬಗೆಹರಿಯ ಲಿವೆ.