Friday, 20th September 2024

Milk Price Hike: ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌; ಹಾಲಿನ ದರ ಹೆಚ್ಚಳ ಸುಳಿವು ಕೊಟ್ಟ ಸಿಎಂ!

CM Siddaramaiah

ರಾಮನಗರ: ರಾಜ್ಯ ಸರ್ಕಾರವು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌ ನೀಡಲು ಮುಂದಾಗಿದೆ. ಈ ಬಗ್ಗೆ ಸ್ವತಂ ಸಿಎಂ ಸಿದ್ದರಾಮಯ್ಯ ಅವರೇ ಕಾರ್ಯಕ್ರಮವೊಂದರಲ್ಲೇ ಬಹಿರಂಗವಾಗಿಯೇ ಸುಳಿವು ನೀಡಿದ್ದಾರೆ. ಹಾಲಿನ ದರ ಏರಿಕೆ (Milk Price Hike) ಮಾಡುತ್ತೇವೆ, ಏರಿಕೆ ಮಾಡಿದ ಹಣ, ಸಂಪೂರ್ಣವಾಗಿ ರೈತರಿಗೆ ಹೋಗುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ಯಾವಾಗಲೂ ರೈತರು, ಹಾಲು ಉತ್ಪಾದಕರು, ದಲಿತರು, ಬಡವರ ಪರ ಇರುತ್ತದೆ. ಹಾಲಿನ ದರ ಏರಿಕೆ (Nandini milk Price Hike) ಸಂಬಂಧ ಕೆಎಂಎಫ್‌ ಅಧಿಕಾರಿಗಳ ಸಭೆ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆನ್ನಲ್ಲೇ ಜೂನ್‌ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ರಾಜ್ಯ ಸರ್ಕಾರ ಏರಿಕೆ ಮಾಡಿತ್ತು. ನಂದಿನಿ ಹಾಲಿನ ದರ ಲೀಟರ್‌ಗೆ 2 ರೂ. ಏರಿಕೆ ಮಾಡಲಾಗಿತ್ತು. ಈ ಹಿಂದೆ 1000 ಮಿ.ಲೀ. ಹಾಲು 42 ರೂ.ಗೆ ಮಾರಾಟವಾಗುತ್ತಿತ್ತು. ಆದರೆ 50 ಮಿ.ಲೀ. ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ, ಅದರ ದರ 2 ರೂ.ಗಳನ್ನು ಸೇರಿಸಿ ಮಾರಾಟ ಮಾಡಲು ಕೆಎಂಎಫ್‌ ನಿರ್ಧರಿಸಿತ್ತು.

ಇದನ್ನೂ ಓದಿ | Mandya Violence: ಇದು ಕಾಂಗ್ರೆಸ್ ಪ್ರಾಯೋಜಿತ ಗಲಭೆ: ಎಚ್‌ಡಿಕೆ ಆರೋಪ, ಸಂತ್ರಸ್ತರಿಗೆ 2 ಲಕ್ಷ ರೂ. ನೆರವು

ನಂದಿನಿ ಹಾಲಿನ ಪ್ಯಾಕೇಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಮಿ.ಲೀ. ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂ. ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಹೇಳುವ ಮೂಲಕ ಬೆಲೆ ಏರಿಕೆಯನ್ನು ಈ ಹಿಂದೆ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದರು.

ನಾಲೆಗಳಿಗೆ ಕಾವೇರಿ ನೀರು ಬಿಡದಿದ್ರೆ ನಾನೇ ಡ್ಯಾಂ ಗೇಟ್‌ ತೆರೆಯುವೆ: ಎಂಜಿನಿಯರ್‌ಗೆ ಎಚ್‌ಡಿಕೆ ಎಚ್ಚರಿಕೆ

HD Kumaraswamy

ನಾಗಮಂಗಲ: ಮಳವಳ್ಳಿ, ನಾಗಮಂಗಲ ಸೇರಿ ವಿವಿಧ ಭಾಗಗಳ ಕೆರೆ ತುಂಬಿಸದಿದ್ದರೆ, ಕೊನೆಯ ಭಾಗದ ಪ್ರದೇಶಗಳ ನಾಲೆಗೆ ನೀರು ಹರಿಸದಿದ್ದರೆ, ನಾನೇ ಬಂದು ಕೃಷ್ಣರಾಜ ಸಾಗರದ ಗೇಟ್‌ಗಳನ್ನು ಎತ್ತಿ ನೀರು ಬಿಡಬೇಕಾಗುತ್ತದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಎಚ್ಚರಿಕೆ ನೀಡಿದರು.

ಗಲಭೆಪೀಡಿತ ನಾಗಮಂಗಲಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು, ಮಳವಳ್ಳಿ ‌ಭಾಗಕ್ಕೆ ಇದುವರೆಗೂ ನೀರು ಕೊಟ್ಟಿಲ್ಲ. ಕುಮಾರಸ್ವಾಮಿಗೆ ವೋಟು ಹಾಕಿದ್ದೀರಿ, ನೀರು ಬೇಕಾದರೆ ಕುಮಾರಸ್ವಾಮಿಯನ್ನೇ ಹೋಗಿ ಕೇಳಿ ಎಂದು ಒಬ್ಬ ಶಾಸಕ ಹೇಳುತ್ತಿ,ದ್ದಾನೆ. ಅಣೆಕಟ್ಟೆ ಇವರ ಅಪ್ಪನ ಮನೆಯ ಆಸ್ತಿಯೇ? ರೈತರಿಗೆ ನೀರು ಕೊಡಲು ಯೋಗ್ಯತೆ ಇಲ್ಲ. ಜಲಪಾತೋತ್ಸವ ಬೇರೆ ಮಾಡುತ್ತಿದ್ದಾರೆ. ನಾಚಿಕೆ ಆಗಬೇಕು ಇವರಿಗೆ ಎಂದು ಕಿಡಿಕಾರಿದರು.

ಕೆರೆಕಟ್ಟೆಗಳಲ್ಲಿ ನೀರು ಇಲ್ಲ. ಮೆಟ್ಟೂರು ಜಲಾಶಯ ತುಂಬಿ ತುಳುಕುತ್ತಿದೆ. ನನ್ನನ್ನು ಭೇಟಿಯಾಗಿದ್ದ ತಮಿಳುನಾಡಿನ ಕೆಲ ನಾಯಕರು ಜಲಾಶಯದಿಂದ ಲಕ್ಷಾಂತರ ಕ್ಯೂಸೆಕ್ ನೀರು ಸಮುದ್ರಕ್ಕೆ ಹರಿದು ಹೋಗುತ್ತಿದೆ ಎಂದು ಹೇಳುತ್ತಾರೆ. ನಮ್ಮಲ್ಲಿ ಮಳೆ ಇಲ್ಲದೆ ಕೆರೆಗಳು ತುಂಬಿಲ್ಲ. ಮೊದಲೇ ತುಂಬಿಸುವ ಕೆಲಸ ಮಾಡಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ಸಂಜೆಯೇ ನಾನು ದೆಹಲಿಯಿಂದ ಬರುವಾಗ ಕಾವೇರಿ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಆರ್.ಎಲ್.ವೆಂಕಟೇಶ್ ಜತೆ ಮಾತನಾಡಿದ್ದೇನೆ. ಅವರಿಗೆ ಸ್ಪಷ್ಟ ಎಚ್ಚರಿಕೆ ಕೊಟ್ಟಿದ್ದೇನೆ. ತಕ್ಷಣ ನಾಲೆಗೆ ನೀರು ಹರಿಸಿ, ಇಲ್ಲವಾದರೆ ಜನರ ಜತೆ ಬಂದು ನಾನೇ ಅಣೆಕಟ್ಟೆಯ ಗೇಟ್‌ಗಳನ್ನು, ಎತ್ತಿ ನೀರು ಬಿಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದೇನೆ. ತಕ್ಷಣ ಅವರು ನೀರು ಹರಿಸದಿದ್ದರೆ ನಾನೇ ರಸ್ತೆಗೆ ಇಳಿಯುತ್ತೇನೆ, ಹೇಳಿದ್ದನ್ನು ಮಾಡಿ ತೋರಿಸುತ್ತೇನೆ ಎಂದು ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟರು.