Thursday, 19th September 2024

Suburban Rail Project: ಉಪನಗರ ರೈಲು ಯೋಜನೆ; 2026ರ ಡಿಸೆಂಬರ್‌ಗೆ ಕಾರಿಡಾರ್‌ 2, 4 ಪೂರ್ಣ

Suburban Rail Project

ಬೆಂಗಳೂರು: ನಗರದ ಚಿಕ್ಕಬಾಣಾವರ- ಬೈಯ್ಯಪ್ಪನಹಳ್ಳಿ (ಕಾರಿಡಾರ್‌-2, 25 ಕಿ.ಮೀ) ಮತ್ತು ಹೀಲಲಗಿ- ರಾಜಾನುಕುಂಟೆ (ಕಾರಿಡಾರ್‌-4, 46.88 ಕಿ.ಮೀ) ಉಪನಗರ ರೈಲ್ವೆ ಯೋಜನೆಗಳನ್ನು (Suburban Rail Project) 2026ರ ಡಿಸೆಂಬರ್‌ ವೇಳೆಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಹಾಗೂ ರೈಲ್ವೇ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸೋಮವಾರ ಕೆ-ರೈಡ್‌ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕೆಲವೊಂದು ಕಡೆ ಭೂಸ್ವಾಧೀನದ ಸಮಸ್ಯೆ ಇದ್ದು, ಮೂರು ತಿಂಗಳ ಒಳಗೆ ಭೂಮಿ ಹಸ್ತಾಂತರಕ್ಕೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಕಾಮಗಾರಿ ವಿಳಂಬಕ್ಕೆ ಯಾವ ಸಬೂಬು ಹೇಳದೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಈ ಸುದ್ದಿಯನ್ನೂ ಓದಿ | Invest Karnataka: ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿದ ಸಿಂಗಾಪುರ ಉದ್ಯಮಿಗಳು

ಒಟ್ಟು ನಾಲ್ಕು ಕಾರಿಡಾರ್‌ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಕಾಮಗಾರಿಗೆ ಚುರುಕು ಮುಟ್ಟಿಸಲು ಕ್ರಮ ತೆಗೆದುಕೊಂಡಿದ್ದು, ನಿಗದಿತ ಅವಧಿಯೊಳಗೇ ಈ ಎರಡೂ ಕಾರಿಡಾರ್‌ ಯೋಜನೆಗಳನ್ನು ಉದ್ಘಾಟಿಸಲಾಗುವುದು. ಇದರ ನಂತರ ಇತರ ಎರಡು ಕಾರಿಡಾರ್‌ ಯೋಜನೆಗಳ ಜಾರಿ ಸಂಬಂಧ ಚರ್ಚಿಸಲಾಗುವುದು ಎಂದರು.

ಸಮನ್ವಯ ಸಭೆಗೆ ಸೂಚನೆ

ಬೆಂಗಳೂರು ಮೆಟ್ರೊ, ಉಪನಗರ ರೈಲು ಯೋಜನೆ ಮತ್ತು ರೈಲ್ವೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕೆಲಸ ಮಾಡಬೇಕಾಗಿದೆ. ಒಂದಕ್ಕೊಂದು ಸ್ಪರ್ಧೆವೊಡ್ಡಿಕೊಳ್ಳುವುದರ ಬದಲು, ಎಲ್ಲಿ ಯಾರ ಸೇವೆ ಇಲ್ಲವೊ ಅಲ್ಲಿ ಮತ್ತೊಬ್ಬರು ಸೇವೆ ನೀಡುವಂತಾಗಲಿ. ಈ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳನ್ನೂ ಸೇರಿಸಿಕೊಂಡು ಸಮನ್ವಯದ ಸಭೆಗಳನ್ನು ನಡೆಸಬೇಕು. ಪರಸ್ಪರ ಪೂರಕವಾಗಿ ಕೆಲಸ ಮಾಡುವುದರಿಂದ ಅನಗತ್ಯ ವಿಳಂಬವನ್ನು ತಡೆಯಬಹುದು ಎಂದು ಸಚಿವ ಸೋಮಣ್ಣ ಸಲಹೆ ನೀಡಿದರು.

ರೈಲ್ವೆ ಬೋಗಿಗಳ ಸಮಸ್ಯೆ

ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ರೈಲ್ವೆ ಬೋಗಿಗಳನ್ನು ಉತ್ಪಾದಿಸಿ, ಸರಬರಾಜು ಮಾಡಲು ಕೆ-ರೈಡ್ ಟೆಂಡರ್‌ ಕರೆದಿದ್ದು, ಯಾವ ಸಂಸ್ಥೆಯೂ ಇದರಲ್ಲಿ ಭಾಗವಹಿಸಿಲ್ಲ. ಹೀಗಾಗಿ ಈ ವಿಷಯದಲ್ಲಿ ರೈಲ್ವೆಯ ನೆರವು ನೀಡಬೇಕೆನ್ನುವ ಸಚಿವ ಎಂ.ಬಿ.ಪಾಟೀಲ ಅವರ ಮನವಿಗೆ ಸ್ಪಂದಿಸಿದ ಸೋಮಣ್ಣ ಅವರು, ಆದಷ್ಟು ಬೇಗ ದೆಹಲಿಯಲ್ಲಿ ಸಭೆ ಆಯೋಜಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ರೈಲ್ವೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಇದಕ್ಕೊಂದು ಪರಿಹಾರ ಸೂಚಿಸುವುದಾಗಿಯೂ ಹೇಳಿದರು.

ಈ ಸುದ್ದಿಯನ್ನೂ ಓದಿ | Kolkata Tour: ಕೊಲ್ಕತ್ತಾಗೆ ಭೇಟಿ ನೀಡಿದಾಗ ಈ ಪ್ರಸಿದ್ಧ ಮಾರುಕಟ್ಟೆ ನೋಡುವುದನ್ನು ಮಿಸ್‌ ಮಾಡಿಕೊಳ್ಳಬೇಡಿ!

2026ರ ಅಂತ್ಯದಲ್ಲಿ ಎರಡೂ ಕಾರಿಡಾರ್‌ ಕಾಮಗಾರಿ ಮುಗಿಯಲು ಯೋಜನೆ ರೂಪಿಸಿದ್ದು, ಅದಕ್ಕಿಂತ ಕನಿಷ್ಠ ಆರು ತಿಂಗಳು ಮೊದಲು ರೈಲ್ವೆ ಬೋಗಿಗಳ ಸರಬರಾಜು ಆಗಬೇಕಾಗುತ್ತದೆ. ಇಲ್ಲದಿದ್ದರೆ ಆ ವೇಳೆಗೆ ರೈಲ್ವೆ ಸಂಚಾರ ಆರಂಭಿಸಲು ಕಷ್ಟ ಆಗುತ್ತದೆ ಎಂದು ಅಧಿಕಾರಿಗಳು ಹೇಳಿದ ನಂತರ ಇದರ ಗಂಭೀರತೆಯನ್ನು ಗಮನಿಸಿ, ತಕ್ಷಣ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಸಚಿವ ಸೋಮಣ್ಣ ನೀಡಿದರು.

ಉಪನಗರ ರೈಲ್ವೆ ಯೋಜನೆ ವಿಸ್ತರಣೆ

ಬೆಂಗಳೂರಿನ ನೆರೆಹೊರೆಯ ನಗರ/ಪಟ್ಟಣಗಳಿಗೆ ಸಂಪರ್ಕ ಕಲ್ಪಿಸಲು ಉಪನಗರ ರೈಲ್ವೆ ಯೋಜನೆಯ ವಿಸ್ತರಣೆ ಅಗತ್ಯ ಇದೆ. ಬೆಂಗಳೂರಿನಿಂದ ಸಮೀಪದ ತುಮಕೂರು, ಮೈಸೂರು, ಮಾಗಡಿ, ಗೌರೀಬಿದನೂರು, ಕೋಲಾರ ನಗರಗಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಚರ್ಚೆ ಆಗಿದೆ. ಇದನ್ನು ಯಾವ ರೀತಿ ಕೈಗೆತ್ತಿಕೊಳ್ಳಬೇಕು ಎಂಬುದರ ಬಗ್ಗೆಯೂ ಅಧಿಕಾರಿಗಳ ಮಟ್ಟದಲ್ಲಿ ಮೊದಲು ಸಭೆಗಳನ್ನು ಮಾಡಿ ನಂತರ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಸೋಮಣ್ಣ ಅವರು ಸಚಿವ ಪಾಟೀಲ ಅವರ ಮನವಿಗೆ ಸ್ಪಂದಿಸಿದರು.

ಬೆಂಗಳೂರು- ಯುಲಂಹಕ- ದೇವನಹಳ್ಳಿ ನಡುವೆ ಸಂಪರ್ಕ ಕಲ್ಪಿಸುವ ಕಾರಿಡಾರ್‌-1 ಉಪನಗರ ರೈಲ್ವೆ ಯೋಜನೆಯನ್ನು ಚಿಕ್ಕಬಳ್ಳಾಪುರ ಮೂಲಕ ಕೋಲಾರಕ್ಕೆ ಸಂಪರ್ಕಿಸುವ ಬದಲು ದೇವನಹಳ್ಳಿಯಿಂದಲೇ ನೇರವಾಗಿ ಕೋಲಾರಕ್ಕೆ ಸಂಪರ್ಕ ಕಲ್ಪಿಸುವ ಸಾಧ್ಯಾಸಾಧ್ಯತೆ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

ವರ್ತುಲ ರೈಲ್ವೆಗೆ ಸಂಪರ್ಕ

ಉಪನಗರ ರೈಲ್ವೆ ಯೋಜನೆಯನ್ನು ಬೆಂಗಳೂರು ಸುತ್ತಲಿನ ವರ್ತುಲ ರೈಲ್ವೆ ಹಳಿಗೆ ಸಂಪರ್ಕ ಕಲ್ಪಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚಿಸಲಾಯಿತು. ಇದೊಂದು ಒಳ್ಳೆಯ ಪರಿಕಲ್ಪನೆ ಆಗಿದ್ದು, ಇದರಿಂದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಹೇಳಿದರು.

ಸುಮಾರು 21,000 ಕೋಟಿ ವೆಚ್ಚದ 281 ಕಿ.ಮೀ ವರ್ತುಲ ರೈಲ್ವೆ ಯೋಜನೆಗೆ ರೈಲ್ವೆ ಮಂಡಳಿ ಒಪ್ಪಿಗೆ ನೀಡಿದ್ದು, ಉಪನಗರ ರೈಲುಗಳನ್ನೂ ಇದರ ಜತೆ ಸಂಪರ್ಕ ಮಾಡುವುದು ಹೆಚ್ಚು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಯಿತು.

ಈ ಸುದ್ದಿಯನ್ನೂ ಓದಿ | Health Tips: ಅರಶಿನವನ್ನು ದಿನಕ್ಕೆ ಎಷ್ಟು ಸೇವಿಸಬಹುದು?

ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ ಶ್ರೀವಾಸ್ತವ, ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ ರಾವ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ, ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್.ಮಂಜುಳಾ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.