Saturday, 28th September 2024

Pralhad Joshi: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ; ಪ್ರಲ್ಹಾದ್‌ ಜೋಶಿ ಆಗ್ರಹ

Pralhad Joshi

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಸಿಲುಕಿದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ರಾಜೀನಾಮೆ ಕೊಡದಿದ್ದರೆ ಸಿಬಿಐ ತನಿಖೆಗೆ ವಹಿಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕತೆ ಇದ್ದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಇಲ್ಲವೇ, ಹಗರಣವನ್ನು ಸಿಬಿಐ ತನಿಖೆಗೆ (CBI Investigation) ವಹಿಸಬೇಕು ಎಂದು ಒತ್ತಾಯಿಸಿದರು.

ಇಲ್ಲಿ ಅಧಿಕಾರಿಗಳು ತನಿಖೆ ಮಾಡಲ್ಲ; ಸತ್ಯ ಹೊರ ಬರಲ್ಲ

ಮುಡಾ ಹಗರಣದ A1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಆಗಿದ್ದರಿಂದ ಇಲ್ಲಿಯ ಅಧಿಕಾರಿಗಳು ತಮ್ಮ ವಿರುದ್ಧ ಸರಿಯಾದ ತನಿಖೆ ಮಾಡಲ್ಲ. ಪರಿಣಾಮ ಸತ್ಯ ಹೊರ ಬರುವುದಿಲ್ಲ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | HD Kumaraswamy: ಭ್ರಷ್ಟ ಐಪಿಎಸ್ ಅಧಿಕಾರಿಗೆ ಕಾಂಗ್ರೆಸ್ ಸರ್ಕಾರದ ಕೃಪಾಕಟಾಕ್ಷ: ಎಚ್‌ಡಿಕೆ ಆರೋಪ

ಇತ್ತೀಚೆಗೆ ಅಷ್ಟೇ ಲೋಕಾಯುಕ್ತಕ್ಕೆ ತಮಗೆ ಬೇಕಾದವರನ್ನು ನೇಮಕ ಮಾಡಿಕೊಂಡಿದ್ದಾರೆ. ಹೀಗಿರುವಾಗ ಸಿಎಂ ವಿರುದ್ಧ ಲೋಕಾಯುಕ್ತ ಎಸ್ಪಿ ಆಗಲಿ, ಕರ್ನಾಟಕ ಪೊಲೀಸ್ ಆಗಲಿ ಪಾರದರ್ಶಕ ತನಿಖೆ ನಡೆಸೋದು ಅಸಾಧ್ಯದ ಮಾತು. ಹಾಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಇಲ್ಲವೇ ಸಿಬಿಐಗೆ ವಹಿಸಬೇಕು ಎಂದು ಜೋಶಿ ಒತ್ತಾಯಿಸಿದರು.

ಸಿಎಂ ಬಂಧನ ಕಾನೂನಿಗೆ ಬಿಟ್ಟ ವಿಷಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಂಧನ ಕಾನೂನಿಗೆ ಬಿಟ್ಟ ವಿಷಯ. ಆದರೆ, ಅವರದ್ದೇ ಸರ್ಕಾರ ಇರುವುದರಿಂದ ಪ್ರಕರಣ ಸುದೀರ್ಘವಾಗಲಿದೆ. ನಮ್ಮ ಹೋರಾಟವೂ ಮುಂದುವರಿಯಲಿದೆ ಎಂದು ತಿಳಿಸಿದರು.

ನೈತಿಕವಾಗಿ ದಿವಾಳಿ ಎದ್ದಿದೆ ಕಾಂಗ್ರೆಸ್

ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ನೈತಿಕವಾಗಿ ದಿವಾಳಿ ಎದ್ದಿದೆ. ನಿರ್ಲಜ್ಜೆಯ ಸಂಸ್ಕೃತಿ, ಸರ್ಕಾರ ಇವರದ್ದಾಗಿದೆ ಎಂದು ಕಿಡಿಕಾರಿದ ಜೋಶಿ ಅವರು, ವಾದ್ರಾ, ಭೂ ಅಕ್ರಮ ಹೀಗೆ ಸಾಕಷ್ಟು ಪ್ರಕರಣಗಳನ್ನು ಹೊತ್ತಿರುವ ಕಾಂಗ್ರೆಸ್ ಹೈಕಮಾಂಡೇ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.

2011 ರಲ್ಲಿ ರಾಜ್ಯಪಾಲರು ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಿದ್ದಾರೆ ಎಂದು ಇದೇ ಕಾಂಗ್ರೆಸ್ ನಾಯಕರು ಹೇಳಿದ್ರು. ಈಗ ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದಾಕ್ಷಣ ರಾಜ್ಯಪಾಲರು ಸಂವಿಧಾನ ಮೀರಿದ್ದಾರೆ ಎನ್ನುತ್ತಿದ್ದಾರೆ. ಇದು ಕಾಂಗ್ರೆಸ್ಸಿಗರ ಅವಕಾಶವಾದಿತನ ಹಾಗೂ ಸಮಯ ಸಾಧಕ ಪ್ರವೃತ್ತಿಯನ್ನು ತೋರುತ್ತದೆ ಎಂದು ಸಚಿವ ಜೋಶಿ ತರಾಟೆಗೆ ತೆಗೆದುಕೊಂಡರು.

ಈ ಸುದ್ದಿಯನ್ನೂ ಓದಿ | Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

ಆಗೇಕೆ ಧ್ವನಿ ಎತ್ತಲಿಲ್ಲ?

2011ರಲ್ಲಿ ಗೋಧ್ರಾ ಘಟನೆ ಆದಾಗ ಸಿಎಂ ಸಿದ್ದರಾಮಯ್ಯ ಏಕೆ ಮೋದಿ ಅವರ ವಿರುದ್ಧ ಧ್ವನಿ ಎತ್ತಲಿಲ್ಲ? ಎಂದು ಪ್ರಶ್ನಿಸಿದ ಜೋಶಿ, ಆಗ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಅದರಲ್ಲಿ ಸಿಲುಕಿಸುವ ಪ್ರಯತ್ನ ಮಾಡಿದ್ದು ಕಾಂಗ್ರೆಸ್ ಎಂದು ಆರೋಪಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸರ್ವರನ್ನೂ ಸಾಮಾಜಿಕ ನ್ಯಾಯದಲ್ಲೇ ಕಾಣುತ್ತಿದ್ದಾರೆ. ಗೋದ್ರಾ, ಗೋದ್ರೋತ್ತರ ಘಟನೆಗಳಲ್ಲಿ ಮೋದಿ ಅವರ ಪಾತ್ರವೇ ಇಲ್ಲವೆಂದು ಅವರು ಸ್ಪಷ್ಟಪಡಿಸಿದರು.