ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಬೆಂಗಳೂರಿನ ‘ಸುಂದರ ಪ್ರಕಾಶನ’ವು ಪ್ರತಿ ವರ್ಷ ‘ಗೌರಿ ಸುಂದರ್ ವಾರ್ಷಿಕ ಪ್ರಶಸ್ತಿ’ಯನ್ನು ನೀಡುತ್ತ ಬಂದಿದೆ. ಈ ವರ್ಷದ ಪ್ರಶಸ್ತಿಗಾಗಿ ಸುಗಮ ಸಂಗೀತ ಕ್ಷೇತ್ರಕ್ಕೆ ನೀಡಿದ ಅನುಪಮ ಕೊಡುಗೆಗಳಿಗಾಗಿ ಶ್ರೀ ಉಪಾಸನಾ ಮೋಹನ್ ಅವರನ್ನು ಆಯ್ಕೆ ಮಾಡಲಾಗಿದೆ.
ಆಯ್ಕೆ ಸಮಿತಿಯಲ್ಲಿ ಕವಿಗಳಾದ ಎಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್.ಲಕ್ಷ್ಮಣರಾವ್ ಮತ್ತು ಗಾಯಕಿ ಕಸ್ತೂರಿ ಶಂಕರ್ ಇದ್ದರು. ಹತ್ತು ಸಾವಿರ ರೂಪಾಯಿ ನಗದು ಮತ್ತು ಸ್ಮರಣಿಕೆಯನ್ನು ಪ್ರಶಸ್ತಿ ಒಳಗೊಂಡಿದೆ. ಪ್ರಶಸ್ತಿಯನ್ನು ಇದೇ ತಿಂಗಳ 19ರಂದು ಭಾನುವಾರ ಸಂಜೆ ನಗರದ ವಾಡಿಯಾ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿತರಿಸಲಾಗುವುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಇಂದಿರಾ ಸುಂದರ್ ತಿಳಿಸಿದ್ದಾರೆ.