ಮಂಡ್ಯ: ಧಾರವಾಡ ಎಕ್ಸ್ಪ್ರೆಸ್ ರೈಲಿನಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ.
ರೈಲು ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿತ್ತು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ 12 ಗಂಟೆ ಸಮಯದಲ್ಲಿ ಘಟನೆ ಸಂಭವಿಸಿದೆ. ಮಂದಗೆರೆ ಬಳಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣವೇ ಚಾಲಕ ರೈಲನ್ನು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ. ಕೂಡಲೇ ಬೋಗಿ ಯಿಂದ ಪ್ರಯಾಣಿಕರು ಕೆಳಗಿಳಿದ ಹಿನ್ನೆಲೆಯಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರೈಲಿನಿಂದ ಕೆಳಗೆ ಇಳಿಯುವಾಗ ತಳ್ಳಾಟ ನೂಕಾಟ ನಡೆದಿದ್ದರಿಂದ ಕೆಲ ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ತಕ್ಷಣವೇ ರೈಲ್ವೆ ಸಿಬ್ಬಂದಿ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಸಂಚಾರ ಆರಂಭಿಸಿದೆ.
ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.