ತಿರುವನಂತಪುರ: ಕೇರಳ (Kerala) ವಿಧಾನಸಭೆ ಆಯೋಜಿಸಿದ್ದ ಓಣಂ (Onam) ಆಚರಣೆಯ ಸಂದರ್ಭದಲ್ಲಿ ವೇದಿಕೆಯಲ್ಲಿ ನೃತ್ಯ ಪ್ರದರ್ಶಿಸುತ್ತಿದ್ದಾಗ 45 ವರ್ಷದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಜುನೈಸ್ ಎಂದು ಗುರುತಿಸಲಾಗಿದ್ದು, ಈ ಹಿಂದೆ ಮಾಜಿ ಶಾಸಕ ಪಿವಿ ಅನ್ವರ್ ಅವರ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.
ಅವರನ್ನು ತಕ್ಷಣ ಜನರಲ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಕೇರಳದ ತಿರುವನಂತಪುರದಲ್ಲಿ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಜುನೈಸ್ ಇತರರೊಂದಿಗೆ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿರುವುದನ್ನು ನೋಡಬಹುದು. ಕೆಲವು ಕ್ಷಣಗಳ ನಂತರ, ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ಸಹ ನೃತ್ಯಗಾರರು ಗಲಿಬಿಲಿಗೊಂಡು ಏನಾಯ್ತು ಎಂದು ನೋಡಲು ಆತನ ಬಳಿ ಧಾವಿಸಿದ್ದಾರೆ.
ಕೇರಳದ ವೈನಾಡು ಮೂಲದ ಜುನೈಸ್ ಸಾವು ಹೇಗೆ ಸಂಭವಿಸಿತು ಎಂಬ ಬಗ್ಗೆ ಇನ್ನೂ ತಿಳಿದು ಬಂದಿಲ್ಲ. ಈ ಹಿಂದೆ ಆಗಸ್ಟ್ನಲ್ಲೂ ಇಂಥದ್ದೇ ಒಂದು ಘಟನೆ ನಡೆದಿತ್ತು. ಮಹಿಳೆಯೊಬ್ಬರು ವಿವಾಹ ಸಮಾರಂಭವೊಂದರ ವೇದಿಕೆಯಲ್ಲಿ ನೃತ್ಯ ಪ್ರದರ್ಶನ ಮಾಡುತ್ತಿದ್ದಾಗ ಕುಸಿದು ಬಿದ್ದಿದ್ದರು. ತಮಿಳುನಾಡಿನ ಮಮಲ್ಲಾಪುರಮ್ನಲ್ಲಿ ಈ ಘಟನೆ ನಡೆದಿತ್ತು. ಜೀವಾ ಎಂದು ಗುರುತಿಲಾದ ಮಹಿಳೆಯು ನೃತ್ಯ ಮಾಡುತ್ತಿದ್ದಾಗ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅಷ್ಟರಾಲ್ಲಗಾಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.
ವಿಡಿಯೊ ವೀಕ್ಷಿಸಿ:
ಇನ್ನೊಂದು ಘಟನೆಯಲ್ಲಿ, ವೇದಿಕೆ ಮೇಲೆ ಪೌರಾಣಿಕ ಪಾತ್ರ ನಿರ್ವಹಿಸುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು. ಹಿಂದೆ, ವೇದಿಕೆಯ ಮೇಲೆ ಪ್ರದರ್ಶನ ನೀಡುತ್ತಿದ್ದ ಕೆಲವರು, ಹಲವರು ಪೌರಾಣಿಕ ಪಾತ್ರಗಳನ್ನು ನಿರ್ವಹಿಸುತ್ತಿದ್ದರೂ, ಆಸ್ಪತ್ರೆಗೆ ಸಾಗಿಸುವ ಮೊದಲೇ ವೇದಿಕೆಯ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಇತ್ತೀಚೆಗೆ ಇಂತಹ ಘಟನೆಗಳು ಹೆಚ್ಚು ಸಂಭವಿಸುತ್ತಿದೆ. ಅದರಲ್ಲೂ 40 ವರ್ಷದೊಳಗಿನವರು ಏಕಾಏಕಿ ಕುಸಿದು ಬಿದ್ದು ಮೃತಪಡುತ್ತಿದ್ದಾರೆ. ಬಹುತೇಕರು ಹೃದಯಸ್ತಂಭನದಿಂದ ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ.
ಕರ್ನಾಟಕದಲ್ಲೂ ಹಲವೆಡೆ ಹೃದಯಾಘಾತದಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ವಯಸ್ಕರು ಮಾತ್ರವಲ್ಲದೆ ಮಕ್ಕಳು ಕೂಡ ಹೃದಯಾಘಾತದಿಂದ ಸಾವಿಗೀಡಾಗುತ್ತಿರುವುದು ತೀವ್ರ ಕಳವಳಕಾರಿಯಾಗಿದೆ. ಇಂದಿನ ಜೀವನಶೈಲಿ, ಆಹಾರ, ಒತ್ತಡ ಇವೇ ಹೃದಯಾಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ರಾಜ್ಯದ ಹಾಸನ ಜಿಲ್ಲೆಯಲ್ಲಿ ಈ ಹಿಂದೆ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಿದೆ ಎಂದು ವರದಿಯಾಗಿತ್ತು. ಈ ಬಗ್ಗೆ ತನಿಖೆಗೆ ಸರ್ಕಾರ ನಿರ್ದೇಶಿಸಿತ್ತು.
ಇದನ್ನೂ ಓದಿ: Viral Video: ಪಾಕ್ನಲ್ಲಿ ಮೊಳಗಿತು ಗಣಪತಿ ಬಪ್ಪಾ ಮೋರಯಾ