ಬೆಂಗಳೂರು: ನಗರದಲ್ಲಿ ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಯು (Bengaluru Rains) ಹಲವು ಅವಾಂತರ ಸೃಷ್ಟಿಸಿದೆ. ವಿವಿಧೆಡೆ ರಸ್ತೆಗಳು ಜಲಾವೃತವಾಗಿ, ಮರಗಳು ಧರೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಈ ನಡುವೆ ವಿಜಯನಗರದ ಕ್ಲಬ್ ಬಳಿ ಗೋಡೆ ಕುಸಿದು ಆಟೋ ಚಾಲಕ ದುರ್ಮರಣ ಹೊಂದಿರುವ ಘಟನೆ ನಡೆದಿದೆ.
ಆಟೋ ಚಾಲಕ ಬೋರಯ್ಯ ಮೃತ ವ್ಯಕ್ತಿ. ವಿಜಯನಗರ ಕ್ಲಬ್ ಪಕ್ಕದ ರಸ್ತೆಯಲ್ಲಿ ಚಾಲಕ ಆಟೋ ನಿಲ್ಲಿಸಿದ್ದರು. ಈ ವೇಳೆ ಏಕಾಏಕಿ ಗೋಡೆ ಕುಸಿದಿದೆ. ಇದರಿಂದ ಆಟೋದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಚಾಲಕನ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.
ಕೆರೆಗಳಂತೆ ಬದಲಾದ ರಸ್ತೆಗಳು!

ನಗರದ ಹಲವೆಡೆ ಶುಕ್ರವಾರ ಸಂಜೆ ಮಳೆ (Bengaluru Rains) ಅಬ್ಬರಿಸಿದ್ದು, ಪ್ರಮುಖ ರಸ್ತೆಗಳು ಜಲಾವೃತವಾಗಿ ಕೆರೆಗಳಂತೆ ಬದಲಾಗಿವೆ. ಭಾರಿ ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡಿದರು. ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿತ್ತು, ಸಂಜೆಯಾಗುತ್ತಿದ್ದಂತೆ ಭಾರಿ ಮಳೆಯಾಗಿದೆ.
ನಗರದ ಮೆಜೆಸ್ಟಿಕ್, ಕಾರ್ಪೋರೇಷನ್, ಕೆ.ಆರ್. ಮಾರ್ಕೆಟ್, ಯುಬಿ ಸಿಟಿ, ರಿಚ್ಮಂಡ್ ಸರ್ಕಲ್, ಶಿವಾನಂದ ಸರ್ಕಲ್, ಜಯನಗರ ಹಾಗೂ ಮಲ್ಲೇಶ್ವರಂ, ರಾಜರಾಜೇಶ್ವರಿ ನಗರ, ಯಲಹಂಕ, ಹೆಬ್ಬಾಳ, ಆರ್ಟಿ ನಗರ, ಸಹಕಾರನಗರ, ವಿದ್ಯಾರಣ್ಯಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ವಿಜಯನಗರ, ನಾಯಂಡಹಳ್ಳಿ, ಮಾಗಡಿ ರಸ್ತೆ, ದಾಸರಹಳ್ಳಿ ಭಾಗದಲ್ಲೂ ಬಿರುಸಿನ ಮಳೆಯಾಗಿದೆ.
ಸಂಜೆ ಕಚೇರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ವರುಣ ಆರ್ಭಟದಿಂದ ವಾಹನ ಸವಾರರು ಪರದಾಡುವಂತಾಯಿತು. ಇನ್ನು ಧಾರಾಕಾರ ಮಳೆಗೆ ಬೆಂಗಳೂರಿನ ತಗ್ಗು ಪ್ರದೇಶಗಳು ಸಂಪೂರ್ಣ ಹೊಳೆಯಂತಾಗಿ ಮಾರ್ಪಟ್ಟಿವೆ. ರಸ್ತೆಗಳ ಮೇಲೆ ನೀರು ನಿಂತಿದ್ದು, ವಾಹನ ಸಂಚಾರ ಸಂಪೂರ್ಣ ಮಂದಗತಿಯಲ್ಲಿ ಸಾಗಿದೆ. ಅಂಡರ್ಪಾಸ್ಗಳು ಜಲಾವೃತಗೊಂಡಿವೆ.