ಬೆಂಗಳೂರು: ಕಳೆದ ಹಲವು ದಿನಗಳಿಂದ ಬಿಸಿಲ ಬೇಗೆಯಿಂದ ಬಸವಳಿದಿದ್ದ ರಾಜಧಾನಿ ಬೆಂಗಳೂರು ಜನರಿಗೆ ವರುಣ (Bengaluru Rains) ತಂಪೆರೆದಿದ್ದಾನೆ. ನಗರದ ಹಲವೆಡೆ ಮಂಗಳವಾರ ಸಂಜೆ ಭಾರಿ ಮಳೆಯಾಗಿದ್ದು, ಪ್ರಮುಖ ರಸ್ತೆಗಳು ನದಿಯಂತಾಗಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು.

ನಗರದ ಹೆಬ್ಬಾಳ, ಆರ್ಟಿ ನಗರ, ಚಿಕ್ಕಪೇಟೆ, ಕೆ.ಆರ್.ಮಾರುಕಟ್ಟೆ, ಯಶವಂತಪುರ, ವಿಜಯನಗರ, ರಾಜಾಜಿನಗರ, ಮೆಜೆಸ್ಟಿಕ್, ಎಂಜಿ ರೋಡ್, ಶಾಂತಿ ನಗರ, ಪೀಣ್ಯ, ಕೋಗಿಲು ಗೇಟ್, ಕೋರಮಂಗಲ, ರೂಪೇಣ ಅಗ್ರಹಾರ, ಮಡಿವಾಳ, ವಿಲ್ಸನ್ ಗಾರ್ಡನ್ ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ತೊಂದರೆ ಅನುಭವಿಸಿದರು.

ಕೋರಮಂಗಲದ ಒಳವರ್ತುಲ ರಸ್ತೆ, ಪೀಣ್ಯ ಮೇಲ್ಸೇತುವೆ, ಚಿಕ್ಕಪೇಟೆ ಮೆಟ್ರೊ ನಿಲ್ದಾಣದ ಬಳಿ, ಜಯಮಹಲ್ ರಸ್ತೆ, ಮೇಖ್ರಿ ವೃತ್ತ ಹೆಬ್ಬಾಳ ಡೌನ್ರಾಂಪ್ನಲ್ಲಿ ಮಳೆ ನೀರು ನಿಂತಿರುವುದರಿಂದ ಟ್ರಾಫಿಕ್ ಜಾಮ್ ಉಂಟಾಗಿ ನಿಧಾನಗತಿಯ ಸಂಚಾರವಿತ್ತು.
ಇನ್ನು ಮುಂದಿನ 24 ಗಂಟೆಗಳವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 21°C ಆಸುಪಾಸಿನಲ್ಲಿರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ 9 ಜಿಲ್ಲೆಗಳಿಗೆ ಬುಧವಾರ ಯೆಲ್ಲೋ ಅಲರ್ಟ್
ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂ.ಗ್ರಾಮಾಂತರ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.