Karnataka Weather: ಇಂದು ಕರಾವಳಿಯಲ್ಲಿ ಸುರಿಯಲಿದೆ ಗುಡುಗು ಸಹಿತ ಭಾರಿ ಮಳೆ
Weather Report: ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ (ಜು. 11)ವೂ ಗುಡುಗು ಸಹಿತ ಭಾರಿ ಮಳೆ ಸುರಿಯಲಿದೆ. ಜತೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಉತ್ತಮ ವರ್ಷಧಾರೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ (ಜು. 11)ವೂ ಗುಡುಗು ಸಹಿತ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಮುಂದಿನ 2 ದಿನ ಉತ್ತರ ಒಳನಾಡು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಅಲ್ಲಿಯೂ ಉತ್ತಮ ವರ್ಷಧಾರೆಯಾಗಲಿದೆ (Karnataka Weather). ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ (Weather Report). 40-50 ಕಿ.ಮೀ. ವೇಗದೊಂದಿಗೆ ನಿರಂತರ ಗಾಳಿ ಬೀಸಲಿದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 20°C ಮತ್ತು 30°C ಇರಲಿದೆ.
ಇಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನದಿ ತೀರದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಸುರಿಯಲಿದೆ. ಹಾವೇರಿ ಮತ್ತು ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ. ಗದಗ, ಬೀದರ್, ಧಾರವಾಡ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಿರಂತರ ಮಳೆಯೊಂದಿಗೆ ಹಗುರ ಮಳೆ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ: Karnataka High Court: ಕೈಗಾರಿಕೆಗಳಿಂದ ತೆರಿಗೆ ಸಂಗ್ರಹಿಸಲು ಗ್ರಾಮ ಪಂಚಾಯತ್ಗಳಿಗೆ ಅಧಿಕಾರವಿಲ್ಲ: ಹೈಕೋರ್ಟ್
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ನಿರಂತರ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ. ಹಾಸನ, ಬಳ್ಳಾರಿ, ಬೆಂಗಳೂರು (ನಗರ, ಗ್ರಾಮೀಣ), ಕೋಲಾರ, ಮೈಸೂರು, ಮಂಡ್ಯ, ವಿಜಯನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜುಲೈ 12ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಕಲಬುರಗಿ, ಹಾವೇರಿ ಬಾಗಲಕೋಟೆ, ಗದಗ ಹಾಗೂ ದಕ್ಷಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಕೋಲಾರ, ಮೈಸೂರು, ಮಂಡ್ಯ, ವಿಜಯನಗರ ಸೇರಿ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 13ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಕೋಲಾರ, ಮೈಸೂರು, ಮಂಡ್ಯ, ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ ಸೇರಿ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಮುನ್ನೆಚ್ಚರಿಕೆ ವಹಿಸಲು ಸೂಚನೆ
ಕರಾವಳಿಯಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುಡುಗು ಇರುವ ವೇಳೆ ಹೊಲದಲ್ಲಿ ಕೆಲಸ ಮಾಡುವುದನ್ನು ತಪ್ಪಿಸಲು ಸೂಚಿಸಲಾಗಿದೆ.