Karnataka Weather: ಹಾಸನ, ಕೊಡಗಿನಲ್ಲಿ ಮಳೆ ಸಾಧ್ಯತೆ; ಬೆಂಗಳೂರಿನಲ್ಲಿ ಏರುತ್ತಲೇ ಇದೆ ತಾಪಮಾನ
ಹಲವು ದಿನಗಳಿಂದ ರಾಜ್ಯದಲ್ಲಿ ಬಿಸಿಲಿ ಬೇಗೆ ಹಾಗೂ ಒಣ ಹವೆ ಇದ್ದು, ಇಂದು ಕೆಲ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಹಲವು ದಿನಗಳಿಂದ ರಾಜ್ಯದಲ್ಲಿ ಬಿಸಿಲಿ ಬೇಗೆ ಹಾಗೂ ಒಣ ಹವೆ ಇದ್ದು, ಇಂದು ಕೆಲ ಕಡೆ ಮಳೆಯಾಗಲಿದೆ ಎಂದು (Karnataka Weather) ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ಮಂಡ್ಯ, ಶಿವಮೊಗ್ಗ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆ ಒಣಗಳು ಸೇರಿದಂತೆ ಕರಾವಳಿಯಲ್ಲಿ ಒಣ ಹವೆ ಮುಂದುವರಿಯಲಿದೆ.
ಕಲಬುರಗಿ, ಬೀದರ್,ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ಶಾಖ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿಯೂ ತಾಪಮಾನ ಏರಿಕೆ ಕಂಡಿದೆ. ಬೆಂಗಳೂರು, ಕರಾವಳಿ ಕರ್ನಾಟಕದ ಭಾಗಗಳಾದ ಮಂಗಳೂರು, ಉಡುಪಿ ಸುತ್ತಮುತ್ತ ಬಿಸಿಲಿನ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ. ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.
ಮಾರ್ಚ್ ಎರಡನೇ ವಾರದ ಬಳಿಕ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಲಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೆಲ ಸೂಚನೆಗಳನ್ನು ಹೊರಡಿಸಿದ್ದು, ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚನೆ ನೀಡಲಾಗಿದೆ. ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಮತ್ತು ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು ತಿಳಿಸಲಾಗಿದೆ.
ಹವಾಮಾನ ವೈಪರೀತ್ಯ: ಇಂಗ್ಲೆಂಡ್ನಲ್ಲಿ ಎರಡು ಏರ್ ಇಂಡಿಯಾ ವಿಮಾನಗಳಿಗೆ ಪರ್ಯಾಯ ವ್ಯವಸ್ಥೆ
ಮಧ್ಯಾಹ್ನದ ವೇಳೆಯಲ್ಲಿಅಲ್ಟ್ರಾವೈಲೆಟ್ ಕಿರಣಗಳ ತೀವ್ರತೆಯ ಸೂಚ್ಯಂಕ 10ರಷ್ಟು ಹೆಚ್ಚಾಗಿರಲಿದ್ದು, ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಜತೆಗೆ, ತಾಪಮಾನದಿಂದ ರಕ್ಷಿಸಿಕೊಳ್ಳಲು ಆಗಾಗ್ಗೆ ನೀರು, ತಂಪು ಪಾನೀಯ, ಹಣ್ಣಿನ ರಸ ಸೇವಿಸಬೇಕು. ಮೈ ಮುಚ್ಚುವಂತಹ ಉಡುಪು ಧರಿಸಬೇಕು ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ.