ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದರೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ ಸೆಪ್ಟೆಂಬರ್ 14ರಂದು ದಕ್ಷಿಣ ಒಳನಾಡಿನ ಕೆಲವೆಡೆ ಗುಡುಗು-ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ವಿಶೇಷವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕೊಡಗು ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಮಳೆಯ ಸಂದರ್ಭದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬೀದರ್, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಮುನ್ಸೂಚನೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವೆ ಮುಂದುವರಿಯಲಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಭಾವವಿದ್ದು, ದಿನವಿಡೀ ಒಣ ಹವೆ ಮತ್ತು ಬಿಸಿಲಿನ ಝಳ ಇರಲಿದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ. ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ, ಬಾಗಲಕೋಟೆ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಬಿಸಿಲು ಇರಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳಲ್ಲೂ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಸೆಪ್ಟೆಂಬರ್ 15 ಮತ್ತು 16ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಕೊಡಗು, ಚಾಮರಾಜನಗರ, ಶಿವಮೊಗ್ಗ, ಹಾಸನ ಸೇರಿದಂತೆ ಹಲವು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದ ನಡುವೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರಿಂದ 16ರವರೆಗೆ ಗುಡುಗು-ಮಿಂಚು ಸಹಿತ ಮಳೆಯ ಸಾಧ್ಯತೆಯನ್ನು IMD ಗುರುತಿಸಿದೆ. ಮಳೆಯೊಂದಿಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸಬಹುದು. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ಕಡಿಮೆಯಾಗುವ ಸಾಧ್ಯತೆ ಇದೆ. ಇಂದು ಬೀದರ್, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಾತ್ರ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಐಪಿಎಲ್ ಫೈನಲ್ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?
ಸೆಪ್ಟೆಂಬರ್ 15 ಮತ್ತು 16ರಂದು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿ ಒಣಹವೆ ಇರಲಿದೆ. ಸೆಪ್ಟೆಂಬರ್ 17ರಿಂದ ಕಲಬುರಗಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯ ಸಾಧ್ಯತೆ ಇದೆ.