ಕೃಷ್ಣ ಜನ್ಮಾಷ್ಟಮಿ ನಡುವೆ ರಾಜ್ಯದ ಹಲವೆಡೆ ಮಳೆಯ ಸಿಂಚನ; ಮನೆಯಿಂದ ಹೊರಗಿಳಿಯುವ ಮುನ್ನ ಹವಾಮಾನ ಮುನ್ಸೂಚನೆ ತಿಳಿಯಿರಿ
Karnataka Weather: ಅಷ್ಟಮಿ ಸಂಭ್ರಮದ ಮಧ್ಯೆ ಶುಕ್ರವಾರವೂ ರಾಜ್ಯದ ವಿವಿಧ ಕಡೆಗಳಲ್ಲಿ ಮಳೆ ಸುರಿಯಲಿದೆ. ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ.
ಚಾಟ್ಜಿಪಿಟಿ ರಚಿತ ಚಿತ್ರ -
ಬೆಂಗಳೂರು, ಸೆ. 4: ಉತ್ತರ ಭಾರತದ ಕೆಲವೆಡೆ ಮಳೆಯ ಅಬ್ಬರ ಜೋರಾಗಿದ್ದರೆ, ರಾಜ್ಯದ ಕೆಲವೆಡೆ ಮತ್ತೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ, ಬೆಂಗಳೂರು ಸೇರಿ ವಿವಿಧೆಡೆ ಅಲ್ಲಲ್ಲಿ ಆಗಾಗ ವರುಣ ಹಾಜರಿ ಹಾಕುತ್ತಿದ್ದು, ಅಷ್ಟಮಿ ಸಂಭ್ರಮದ ಮಧ್ಯೆ ಶುಕ್ರವಾರವೂ (ಸೆಪ್ಟೆಂಬರ್ 4) ಮಳೆ ಸುರಿಯಲಿದೆ (Karnataka Weather). ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ (Bengaluru Rains). ಜತೆಗೆ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21°C ಹಾಗೂ 31°C ಇರಲಿದೆ. ಬೆಳಗ್ಗೆ ಮತ್ತು ರಾತ್ರಿ ಚಳಿಯ ಅನುಭವವಾಗಲಿದೆ.
ವಿಜಯಪುರ, ಬೆಳಗಾವಿ, ಬಾಗಲಕೋಟೆ, ರಾಯಚೂರು, ಧಾರವಾಡ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.
ಮುಂದಿನ 7 ದಿನಗಳ ಹವಾಮಾನ:
@Indiametdept 7 ದಿನಗಳ ಜಿಲ್ಲಾವಾರು #ಮಳೆ #ಮುನ್ಸೂಚನೆ (ದಿನಾಂಕ 03.09.26).
— Karnataka State Natural Disaster Monitoring Centre (@KarnatakaSNDMC) September 3, 2026
7 days District-wise #Rainfall #Forecast from India Meteorological Department (Date: 03.09.26). #ksndmc pic.twitter.com/MCB2RyBjS5
ದಕ್ಷಿಣ ಒಳನಾಡಿನ ಬೆಂಗಳೂರು (ನಗರ/ಗ್ರಾಮಾಂತರ), ಬಳ್ಳಾರಿ, ಚಾಮರಾಹನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ವರ್ಷಧಾರೆಯಾಗಲಿದೆ.
ಉತ್ತರ ಒಳನಾಡಿನ ವಿಜಯಪುರ, ಗದಗ, ರಾಯಚೂರು, ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಸಾಧಾರಣ ವರ್ಷಧಾರೆಯಾಗಲಿದೆ. ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಹಗುರ ಮಳೆ ಸುರಿಯಲಿದೆ. ಮುಂದಿನ 7 ದಿನಗಳವರೆಗೆ ಇದೇ ರೀತಿಯ ವಾತಾವರಣ ಕಂಡು ಬರಲಿದೆ.
ಗುರುವಾರದ ವಾತಾವರಣ ಹೇಗಿತ್ತು?
ಇನ್ನು ಗುರುವಾರ ರಾಜ್ಯಾದ ಕೆಲವೆಡೆ ಸಾಧಾರಣ ಮಳೆಯಾಗಿದ್ದು ಬಿಟ್ಟರೆ ಬಹುತೇಕ ಕಡೆಗಳಲ್ಲಿ ಒಣ ಹವೆ ಇತ್ತು. ಉತ್ತರ ಒಳನಾಡಿನಲ್ಲಿ ಮಾನ್ಸೂನ್ ಸಾಮಾನ್ಯವಾಗಿದ್ದರೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ದುರ್ಬಲವಾಗಿತ್ತು. ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ (3 ಸೆಂ.ಮೀ.).
ಉತ್ತರ ಭಾರತದಲ್ಲಿ ವಿವಿಧೆಡೆ ಭಾರಿ ಮಳೆ
ಈ ಮಧ್ಯೆ ಉತ್ತರ ಭಾರತದ ಬಿಹಾರ, ಉತ್ತರ ಪ್ರದೇಶ, ಉತ್ತರಾಖಂಡ ಸೇರಿ ವಿವಿಧ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲವೆಡೆ ನದಿ ಉಕ್ಕಿ ಹರಿಯುತ್ತಿದ್ದು, ದಂಡೆಯಲ್ಲಿ ವಾಸಿಸುವ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೆಲವೆಡೆ ಭೂಕುಸಿತವೂ ಸಂಭವಿಸುತ್ತಿದ್ದು, ಜನ-ಜೀವನ ಅಸ್ತವ್ಯಸ್ತವಾಗಿದೆ.
ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್ಸೈಟ್ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.